ADVERTISEMENT

ಸರ್ಕಾರಿ ವೆಬ್‍ಸೈಟ್‍ನಲ್ಲಿ ಕನ್ನಡಕ್ಕೆ ಆದ್ಯತೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 8:32 IST
Last Updated 8 ಸೆಪ್ಟೆಂಬರ್ 2022, 8:32 IST
ಶಿವಮೊಗ್ಗದಲ್ಲಿ ಬುಧವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅಧಿಕಾರಿಗಳ ಸಭೆ ನಡೆಸಿದರು
ಶಿವಮೊಗ್ಗದಲ್ಲಿ ಬುಧವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅಧಿಕಾರಿಗಳ ಸಭೆ ನಡೆಸಿದರು   

ಶಿವಮೊಗ್ಗ: ಸರ್ಕಾರಿ ಇಲಾಖೆಗಳ ಎಲ್ಲಾ ವೆಬ್‍ಸೈಟ್‍ಗಳಲ್ಲಿ ಮತ್ತು ತಂತ್ರಾಂಶಗಳಲ್ಲಿ ಕನ್ನಡ ಭಾಷೆಗೆ ಕಡ್ಡಾಯವಾಗಿ ಆದ್ಯತೆ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳಲ್ಲಿ ಕನ್ನಡ ಅನುಷ್ಠಾನ ಸಂಬಂಧ ಅವರು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಕೆಲವು ಇಲಾಖೆಗಳ ವೆಬ್‍ಸೈಟ್‍ನಲ್ಲಿ ಮುಖಪುಟದಲ್ಲಿ ಕನ್ನಡ ಭಾಷೆ ಬಳಕೆ ಇದ್ದರೂ, ಮಾಹಿತಿಗಳು ಇಂಗ್ಲಿಷ್ ಭಾಷೆಯಲ್ಲಿವೆ. ವೆಬ್‍ಸೈಟ್‍ಗಳಲ್ಲಿ ಪ್ರತಿ ಮಾಹಿತಿಯೂ ಕನ್ನಡದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಇದೇ ರೀತಿ ಸಾರ್ವಜನಿಕರಿಗೆ ಸೇವೆ ಒದಗಿಸುವ ತಂತ್ರಾಂಶಗಳಲ್ಲಿ ಸಹ ಕಡ್ಡಾಯವಾಗಿ ಕನ್ನಡ ಅಳವಡಿಸಬೇಕು. ಜನಸಾಮಾನ್ಯರಿಗೆ ನೇರವಾಗಿ ಸೇವೆ ಒದಗಿಸುವ ಇಲಾಖೆಗಳಲ್ಲಿ ಕನ್ನಡದ ಅನುಷ್ಠಾನ ಕಡ್ಡಾಯವಾಗಿರಬೇಕು ಎಂದು ಹೇಳಿದರು.

ADVERTISEMENT

ಇದೇ ರೀತಿ ಬ್ಯಾಂಕ್, ಆರ್‌ಟಿಒ, ಮೆಸ್ಕಾಂ, ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸೇವೆಗಳನ್ನು ಕನ್ನಡದಲ್ಲಿಯೇ ಒದಗಿಸಬೇಕು. ಇಲ್ಲಿ ಅರ್ಜಿ ನಮೂನೆ, ಚಲನ್‌ಗಳು ಕನ್ನಡದಲ್ಲಿಯೂ ಇರುವಂತೆ ಖಾತ್ರಿ ಪಡಿಸಬೇಕು. ಎಲ್ಲಾ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು. ಸ್ಥಳೀಯ ಸಂಸ್ಥೆಗಳು ಅಂಗಡಿಗಳಿಗೆ ಪರವಾನಗಿ ನೀಡುವ ಸಂದರ್ಭದಲ್ಲಿ ಅದನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಕನ್ನಡ ಅನುಷ್ಠಾನದಲ್ಲಿನ ಲೋಪಗಳ ಕುರಿತು ಪ್ರಾಧಿಕಾರಕ್ಕೆ ಬಂದಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಗೋಪಾಲಗೌಡ ಬಡಾವಣೆಯಲ್ಲಿರುವ ರಾಷ್ಟ್ರೀಯ ಬ್ಯಾಂಕ್‍ನಲ್ಲಿ ಅರ್ಜಿ ನಮೂನೆಗಳು ಕನ್ನಡದಲ್ಲಿ ಇಲ್ಲದ ಬಗ್ಗೆ ದೂರು ಬಂದಿದ್ದು, ಇದನ್ನು ತಕ್ಷಣ ಸರಿಪಡಿಸಬೇಕುಎಂದು ತಿಳಿಸಿದರು.

‘ಶಿಕ್ಷಕರ ಕೊರತೆಯಿಂದ ಮುಚ್ಚಲಾಗಿರುವ ಸರ್ಕಾರಿ ಶಾಲೆಗಳ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಗಳ ವಿವರ ಒದಗಿಸಬೇಕು. ಕನ್ನಡ ಕಲಿಕಾ ಅಧಿನಿಯಮ 2017 ಅನ್ವಯ ಪ್ರತಿ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ಕಡ್ಡಾಯವಾಗಿ ಕನ್ನಡ ಕಲಿಸಬೇಕಾಗಿದ್ದು, ಅದರ ಅನುಷ್ಠಾನ ಪರಿಶೀಲಿಸಬೇಕು. ಕನ್ನಡ ಅಂಕಿಗಳ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ನವೆಂಬರ್ 1ರಿಂದ ಕನ್ನಡ ಅಂಕಿ ಅಭಿಯಾನ ಆರಂಭಿಸಲಾಗುವುದು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಆರ್‌. ಸೆಲ್ವಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಇದ್ದರು.

‘ಕನ್ನಡದಲ್ಲಿ ಮರಣೋತ್ತರ ಪರೀಕ್ಷೆ ವರದಿ’

ವೈದ್ಯರು ನೀಡುವ ಮರಣೋತ್ತರ ಪರೀಕ್ಷೆ (ಪೋಸ್ಟ್‌ ಮಾರ್ಟಂ) ವರದಿ, ಬ್ಯಾಂಕ್‍ಗಳ ಪತ್ರ ವ್ಯವಹಾರ, ಸಾರ್ವಜನಿಕ ಸೇವೆಗಳು, ಔಷಧಗಳ ಹೆಸರು ಕನ್ನಡದಲ್ಲಿ ಸಹ ಇರುವಂತೆ ನೋಡಿಕೊಳ್ಳಬೇಕು ಎಂದು ನಾಗಾಭರಣ ಸಭೆಯಲ್ಲಿ ಸೂಚಿಸಿದರು.

ವಿವಿಧ ಇಲಾಖೆಗಳು ಪ್ರಕಟಿಸುವ ಟೆಂಡರ್ ಅಧಿಸೂಚನೆ ಇನ್ನೂ ಇಂಗ್ಲಿಷ್‍ನಲ್ಲಿರುವುದನ್ನು ಗಮನಿಸಲಾಗಿದೆ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಟೆಂಡರ್ ಅಧಿಸೂಚನೆ ಪ್ರಕಟಿಸಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.