
ಸಾಗರ: ‘ತೀರ್ಪುಗಳ ಪ್ರಕಟ ಸೇರಿದಂತೆ ನ್ಯಾಯಾಲಯದ ಕಾರ್ಯಕಲಾಪಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಭಾಷೆ ಬಳಕೆಯಾಗಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಂಜುನಾಥ್ ಒತ್ತಾಯಿಸಿದ್ದಾರೆ.
ಇಲ್ಲಿನ ಗಾಂಧಿ ಮೈದಾನದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಾಡು, ನುಡಿ ಸಂಭ್ರಮದ ಸಮಾರೋಪದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
‘ಆಡಳಿತದ ಎಲ್ಲಾ ಹಂತಗಳಲ್ಲಿ ಸಂಪೂರ್ಣವಾಗಿ ಕನ್ನಡ ಭಾಷೆ ಬಳಕೆಯಾಗುವುದು ಬಹಳ ಮುಖ್ಯವಾದ ಸಂಗತಿಯಾಗಿದೆ. ಇದರಿಂದ ಜನಸಾಮಾನ್ಯರೂ ಆಡಳಿತದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.
‘ನಾಡಗೀತೆ ಎಂದು ಪರಿಗಣಿಸಲ್ಪಟ್ಟಿರುವ ಜಯ ಭಾರತ ಜನನಿಯ ತನುಜಾತೆ ಗೀತೆ ರಚನೆಯಾಗಿ ನೂರು ವರ್ಷಗಳು ಸಂದಿವೆ. ಇದನ್ನು ರಚಿಸಿದಾಗ ಕುವೆಂಪು ಅವರು ಕೆ.ವಿ.ಪುಟ್ಟಪ್ಪ ಎಂದಷ್ಟೇ ಪರಿಚಿತರಾಗಿದ್ದರು. ಕನ್ನಡ ಭಾಷೆ ಹಾಗೂ ನಾಡಿನ ಹಿರಿಮೆಯನ್ನು ಸಾರುವಲ್ಲಿ ಈ ಗೀತೆ ಯಶಸ್ವಿಯಾಗಿದೆ’ ಎಂದರು.
‘ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಿಗೆ ಸೇರುತ್ತಿರುವ ಮಕ್ಕಳ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಕನ್ನಡ ಶಾಲೆಗಳ ಅಸ್ತಿತ್ವಕ್ಕೆ ಸಂಚಕಾರ ಎದುರಾಗಿದೆ. ಕೇವಲ ಸರ್ಕಾರದಿಂದ ಮಾತ್ರ ಸರ್ಕಾರಿ ಶಾಲೆಗಳ ಉಳಿವು ಸಾಧ್ಯವಿಲ್ಲ. ಜನರ ಬೆಂಬಲ ಈ ನಿಟ್ಟಿನಲ್ಲಿ ಅತ್ಯಗತ್ಯ’ ಎಂದು ಅವರು ಹೇಳಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಟಿ.ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮಾಲತೇಶ್, ಜಾನಪದ ಪರಿಷತ್ ನ ಅಧ್ಯಕ್ಷ ಸತ್ಯನಾರಾಯಣ ಸಿರಿವಂತೆ, ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಸದಾನಂದ ಶರ್ಮ, ಪ್ರಮುಖರಾದ ಜಿ.ನಾಗೇಶ್, ಪ್ರಕಾಶ್, ಶ್ರೀಪಾದ್, ಶಿವಶಂಕರ್ ಇದ್ದರು.
ಗಿರೀಶ್ ರಾಯ್ಕರ್ ಸ್ವಾಗತಿಸಿದರು. ಶಿವಯೋಗಿ ಜಿ.ಎಚ್. ವಂದಿಸಿದರು. ನಾರಾಯಣ ಮೂರ್ತಿ ಕಾನುಗೋಡು ನಿರೂಪಿಸಿದರು. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.