ಸಾಗರ: ಬರಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಹೇಶ್ ಜೋಶಿ ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಸ್ಪರ್ಧಿ ಡಿ.ಬಿ. ಶಂಕರಪ್ಪ ಅವರನ್ನು ಬೆಂಬಲಿಸಬೇಕು ಎಂದು ಪರಿಷತ್ತಿನ ನಿಕಟಪೂರ್ವ ತಾಲ್ಲೂಕು ಅಧ್ಯಕ್ಷ ಎಸ್.ವಿ. ಹಿತಕರ ಜೈನ್ ಮನವಿ ಮಾಡಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಶಂಕರಪ್ಪ ಅವರ ಸಾರಥ್ಯದಲ್ಲಿ ಪರಿಷತ್ತಿನ ಕಾರ್ಯಕ್ರಮಗಳ ವಿಕಾಸವಾಗಿದೆ. ಶಿವಮೊಗ್ಗದಲ್ಲಿ ಸಾಹಿತ್ಯ ಭವನ ನಿರ್ಮಾಣ ಸೇರಿ ಹಲವು ರಚನಾತ್ಮಕ ಕೆಲಸಗಳು ನಡೆದಿವೆ’ ಎಂದು ಹೇಳಿದರು.
ಸಾಗರ ತಾಲ್ಲೂಕಿನಲ್ಲಿ ಐದು ವರ್ಷಗಳ ಕಾಲ ಮೂರು ದಿನದ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಲಾಗಿದೆ.
ಇಲ್ಲಿನ ಸಾಹಿತ್ಯ ಭವನ ಕಟ್ಟಡದ ಮೇಲಿದ್ದ ₹ 16 ಲಕ್ಷ ಸಾಲವನ್ನು ತೀರಿಸಲಾಗಿದೆ. ಭವನಕ್ಕೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ₹ 25 ಲಕ್ಷ ಹೆಚ್ಚುವರಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ವಿವರಿಸಿದರು.
ಪರಿಷತ್ತಿನ ಕಾರ್ಯಕ್ರಮಗಳಲ್ಲಿ ಎಲ್ಲಾ ವರ್ಗದವರಿಗೆ ಪ್ರಾತಿನಿಧ್ಯ ನೀಡಲಾಗಿದೆ. ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ಮಾಡಿದವರಿಗೆ ಸ್ಥಾನ ನೀಡಿಲ್ಲ. ಆರ್ಥಿಕ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಪ್ರಮುಖರಾದ ಮ.ಸ. ನಂಜುಂಡಸ್ವಾಮಿ, ಎಸ್.ಎಂ. ಗಣಪತಿ, ಗಂಗಮ್ಮ, ರವೀಂದ್ರ ಸಾಗರ್, ಶಿವಾನಂದ ಮಾಸೂರು, ಹನುಮಂತಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.