ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ಬಳಿ ಶನಿವಾರ ಬೈಕ್ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ಇಬ್ಬರು ಯುವಕರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಉಪಚರಿಸಿದರು. ಬಳಿಕ ತಮ್ಮ ಬೆಂಗಾವಲು ವಾಹನದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ಜೇಡಿಕುಣಿಯ ಸುಬ್ರಹ್ಮಣ್ಯ (19) ಹಾಗೂ ಸಾಲೂರಿನ ಸಂಪತ್ (20) ಬೈಕ್ನಲ್ಲಿ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ರಸ್ತೆ ಬದಿಗೆ ಉರುಳಿ ಬಿದಿದ್ದಾರೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಆರಗ ಅವರು ಗಾಯಾಳುಗಳನ್ನು ನೋಡಿ ವಾಹನ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದರು. ಕಾರಿನಿಂದ ಇಳಿದು ಹೋಗಿ ಗಾಯಾಳುಗಳಿಗೆ ನೀರು ಕುಡಿಸಿದರು. ಪ್ರಾಥಮಿಕ ಚಿಕಿತ್ಸೆ ನೀಡಿ ಧೈರ್ಯ ತುಂಬಿದರು. ಅಲ್ಲಿ ನೆಟ್ವರ್ಕ್ ಸಿಗದ ಕಾರಣ ಆಂಬುಲೆನ್ಸ್ಗೆ ಕರೆ ಮಾಡಲೂ ಸಾಧ್ಯವಾಗಿರಲಿಲ್ಲ. ಹೀಗಾಗಿ ತಕ್ಷಣವೇ ತಮ್ಮ ಬೆಂಗಾವಲು ವಾಹನದ ಸಿಬ್ಬಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಂತೆ ಸೂಚಿಸುವ ಮೂಲಕ ಚಿಕಿತ್ಸೆ ಕೊಡಿಸಲು ನೆರವಾದರು. ಸಚಿವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.