ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಬಾಗಿನ ಅರ್ಪಿಸಿದರು. ಈ ವೇಳೆ ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಇದ್ದರು
ಶಿವಮೊಗ್ಗ: ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಅನುದಾನ ಕೊಡಲು ಬಿಜೆಪಿ ಸಂಸದರು ಕೇಂದ್ರಕ್ಕೆ ಒತ್ತಡ ಹೇರಬೇಕು. ಇಲ್ಲವಾದರೆ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಮರು ಚುನಾವಣೆ ಎದುರಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಜಲಸಂಪನ್ಮೂಲ ಇಲಾಖೆ ಮತ್ತು ರಾಜ್ಯ ನಿರಾವರಿ ನಿಗಮದಿಂದ ಇಲ್ಲಿನ ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮತ್ತು ನೂತನ ಪ್ರವಾಸಿ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ನಲ್ಲಿ ₹5300 ಕೋಟಿ ಅನುದಾನ ಕೊಡುವ ಬಗ್ಗೆ ಘೋಷಿಸಿದ್ದರು. ಆದರೆ, ಆ ಹಣ ಬಿಡುಗಡೆಯೇ ಆಗಿಲ್ಲ. ರಾಜ್ಯದ ಜನರ ಋಣ ಬಿಜೆಪಿ ಸಂಸದರ ಮೇಲಿದೆ. ಇದನ್ನು ಮರೆಯಬಾರದು ಎಂದರು.
ಇಲ್ಲಿನ ಭದ್ರಾ ಮೇಲ್ದಂಡೆ ಯೋಜನೆ, ಕಳಸಾ ಬಂಡೂರಿ, ಮೇಕೆದಾಟು ಸೇರಿದಂತೆ ವಿವಿಧ ಯೋಜನೆಗಳಿಗೆ ಗೆಜೆಟ್ ನೋಟಿಫೀಕೇಶನ್ ಮಾಡಿಸಬೇಕು. ಈ ಬಗ್ಗೆ ಅನೇಕ ಬಾರಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಆದರೆ, ಯಾವುದೇ ಪ್ರತಿಕ್ರಿಯೆ ಕೇಂದ್ರ ಸರ್ಕಾರ ನೀಡಿಲ್ಲ. ಆದ್ದರಿಂದ, ಬಿಜೆಪಿಯ ಸಂಸದರಿಗೆ ರೈತರು, ಜನರು ಒತ್ತಡ ಹೇರಬೇಕು. ಅನುದಾನ ತರುವಂತೆ ಆಗ್ರಹಿಸಬೇಕು ಎಂದರು.
ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಆಸರೆಯಾಗಿವೆ. ಕೇಂದ್ರ ಬಿಜೆಪಿಯವರು ಈ ಯೋಜನೆಗಳನ್ನು ನಕಲು ಮಾಡಿ ವಿಫಲವಾದರು.
2028 ಕ್ಕೂ ಕಾಂಗ್ರೆಸ್ ಆಡಳಿತಕ್ಕೆ ಬರಲಿದೆ. ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಂತೋಷದಿಂದ ಬಂದಿದ್ದೇನೆ. ಭದ್ರೆ ತುಂಬಿದರೆ, ರೈತರ ಜೀವನ ಸುಭದ್ರವಾಗಲಿದೆ. ಅಣೆಕಟ್ಟೆಗೆ 60 ವರ್ಷ ತುಂಬಿದೆ. ರೈತರನ್ನು ಬದುಕಿಸಲು ಸರ್ಕಾರ ಬದ್ದವಾಗಿದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಎಂದು ಹೇಳಲಾಗುತ್ತಿತ್ತು. ಆದರೆ, ಟೀಕಿಸುವವರಿಗೆ ಅರಿವಾಗಿದೆ. ಇಲ್ಲಿ ಕೆಲಸಗಳು ಉಳಿಯುತ್ತವೆ. ಟೀಕೆಗಳು ಸಾಯುತ್ತವೆ. ಪಕ್ಷದ ಶಾಸಕರು ಜನರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಮರಕ್ಕೆ ಬೇರು ಎಷ್ಟು ಮುಖ್ಯವೊ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದ ಅವರು, ಕಾಂಗ್ರೆಸ್ ಜನರ ನಂಬಿಕೆ ಉಳಿಸಿಕೊಳ್ಳುತ್ತದೆ ಎಂದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.