ಶಿವಮೊಗ್ಗ: ‘ಜೀವನದಲ್ಲಿ ಉತ್ತಮ ಕೆಲಸಗಳನ್ನು ಮಾಡಿದರೆ ಜನರ ಮನಸ್ಸಿನಲ್ಲಿ ಉಳಿಯುತ್ತೇವೆ. ನಾಡಪ್ರಭು ಕೆಂಪೇಗೌಡರು ಕೆಲಸ ಮಾಡಿ ಬೆಂಗಳೂರಿಗೆ ಮಹತ್ತರ ಕೊಡುಗೆ ನೀಡಿದ ಕಾರಣ 500 ವರ್ಷ ಕಳೆದರೂ ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ’ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 513 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸಮಾಜಕ್ಕೆ ತಮ್ಮ ಜೀವನವನ್ನು ಮುಡುಪಿಟ್ಟ ಮಹನೀಯರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಇಂತಹ ಮಹಾನ್ ಪುರುಷರ ಕುರಿತಾದ ವಿಷಯಗಳನ್ನು ಪಠ್ಯ ಪುಸ್ತಕಗಳಲ್ಲಿ ಅಳವಡಿಸುವ ಮೂಲಕ ಅವರ ಇತಿಹಾಸ, ಕೊಡುಗೆ, ಆದರ್ಶಗಳ ಬಗ್ಗೆ ತಿಳಿದುಕೊಂಡು ನಾವು ಸಹ ಮೌಲ್ಯಯುತ ಬದುಕನ್ನು ಜೀವಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಂ.ಕೆ.ವೀಣಾ ಅವರು ನಾಡಪ್ರಭು ಕೆಂಪೇಗೌಡರ ಜೀವನ, ಅವರ ಆಡಳಿತ, ಸಮಾಜಮುಖಿ ಕಾರ್ಯಗಳು ಹಾಗೂ ಬೆಂಗಳೂರು ನಿರ್ಮಾಣಕ್ಕೆ ನೀಡಿದ ಕೊಡುಗೆ ಕುರಿತು ಉಪನ್ಯಾಸ ನೀಡಿದರು.
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ
ರಂಗೇಗೌಡ, ಸದಸ್ಯೆ ರೇಖಾ
ರಂಗನಾಥ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಸ್ಪಿ ಬಿ.ಎಂ.ಲಕ್ಷ್ಮಿ ಪ್ರಸಾದ್, ಸಿಇಒ ಎಂ.ಎಲ್.ವೈಶಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ
ಎನ್.ಎಚ್ ಶ್ರೀಕಾಂತ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.