ADVERTISEMENT

ಸರ್ಕಾರ ಅಸ್ಥಿರಗೊಳಿಸಲು ಸಂಚು: ಸಿದ್ದರಾಮಯ್ಯ ಉಚ್ಛಾಟನೆಗೆ ಈಶ್ವರಪ್ಪ ಆಗ್ರಹ

’ಮುಂದಿನ ಸಿಎಂ ಹೇಳಿಕೆ’

​ಪ್ರಜಾವಾಣಿ ವಾರ್ತೆ
Published 11 ಮೇ 2019, 11:41 IST
Last Updated 11 ಮೇ 2019, 11:41 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ಮುಂದಿನ ಮುಖ್ಯಮಂತ್ರಿ ತಾವೇ ಎಂದು ಬೆಂಬಲಿಗರ ಮೂಲಕ ಹೇಳಿಸುತ್ತಿರುವ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷದಿಂದಲೇ ಉಚ್ಛಾಟಿಸಬೇಕು ಎಂದು ಬಿಜೆಪಿ ಮುಖಂಡ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.

ಕೆಲವು ಬೆಂಬಲಿಗ ಶಾಸಕರನ್ನು ಮುಂದೆ ಬಿಟ್ಟು ಗೊಂದಲ ಸೃಷ್ಟಿಸುತ್ತಿದ್ದಾರೆ. ಈಗಿರುವ ಸರ್ಕಾರ ಬೀಳಿಸಿ, ತಾವು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಅವರು ಏನೇ ಮಾಡಿದರೂ ಈ ಜನ್ಮದಲ್ಲಿ ಮುಖ್ಯಮಂತ್ರಿ ಆಗುವುದಿಲ್ಲ. ಅವರ ವರ್ತನೆ ಪರಿಣಾಮ ಕಾಂಗ್ರೆಸ್ ರಾಜ್ಯದಲ್ಲಿ ಸಂಪೂರ್ಣ ನಿರ್ನಾಮವಾಗಲಿದೆ ಎಂದು ಭವಿಷ್ಯ ನುಡಿದರು.

ರಾಜ್ಯದ ಜನರು ಬರದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕುಡಿಯುವ ನೀರಿಗೂ ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಸ್ಥಿರಗೊಳಿಸಲು ಸಂಚು ಮಾಡುತ್ತಿದ್ದಾರೆ. ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಅತ್ತ ಮುಖ್ಯಮಂತ್ರಿ ರೆಸಾರ್ಟ್‌ ಮೊರೆ ಹೋಗುತ್ತಿದ್ದಾರೆ. ಅವರಿಬ್ಬರ ಆಟದ ಫಲವಾಗಿ ರಾಜ್ಯದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಆರಂಭವಾಗಿದೆ. ಸಿದ್ದರಾಮಯ್ಯ, ಪರಮೇಶ್ವರ್ ಅವರ ಗುಂಪುಗಳಮಧ್ಯೆತಿಕ್ಕಲಾಟ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕರು ಅಧಿಕಾರದ ಲಾಲಸೆ, ಅವಕಾಶವಾದಿತನಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ನಾಶ ಮಾಡುತ್ತಿದ್ದಾರೆ. ಆ ಮೂಲಕ ಕಾಂಗ್ರೆಸ್ ಸಹ ನಿರ್ನಾಮವಾಗುತ್ತದೆ ಎಂದು ಭವಿಷ್ಯ ನುಡಿದರು.

ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ಅಲಂಕರಿಸುವುದು ಖಚಿತ. ವಿಧಾನಸಭೆ ಉಪ ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ಸಂಖ್ಯಾ ಬಲ 106ಕ್ಕೆ ಏರಲಿದೆ. ಇಬ್ಬರು ಪಕ್ಷೇತರರು, ಕಾಂಗ್ರೆಸ್ ಅತೃಪ್ತರ ಸಹಕಾರ ಪಡೆದು ಬಿಜೆಪಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಉಪ ಮೇಯರ್ ಚನ್ನಬಸಪ್ಪ, ಮುಖಂಡರಾದ ಡಿ.ಎಸ್. ಅರುಣ್, ಬಿ.ಆರ್. ಮಧುಸೂದನ್, ಹಿರಣ್ಣಯ್ಯ, ರತ್ನಾಕರ ಶೆಣೈ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.