ADVERTISEMENT

ಮಾಂಟೆಸ್ಸರಿ: ತಿಂಗಳಲ್ಲಿ 38,000 ದಾಖಲಾತಿ; ಮಧು ಬಂಗಾರಪ್ಪ

‘ನನ್ನ ಶಾಲೆ ನನ್ನ ಜವಾಬ್ದಾರಿ’ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 14:15 IST
Last Updated 16 ಆಗಸ್ಟ್ 2024, 14:15 IST
ಮಧು ಬಂಗಾರಪ್ಪ
ಮಧು ಬಂಗಾರಪ್ಪ   

ಶಿವಮೊಗ್ಗ: ‘ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ 1,700 ಸರ್ಕಾರಿ ಶಾಲೆಗಳಲ್ಲಿ ಈ ವರ್ಷ ಪ್ರಾಯೋಗಿಕವಾಗಿ ಅರಂಭಿಸಿರುವ ಎಲ್‌ಕೆಜಿ, ಯುಕೆಜಿ ಒಳಗೊಂಡ ಮಾಂಟೆಸ್ಸರಿ ಶಿಕ್ಷಣ ವಿಭಾಗಕ್ಕೆ ಸಾರ್ವಜನಿಕರಿಂದ ಭಾರಿ ಬೆಂಬಲ ವ್ಯಕ್ತವಾಗಿದೆ. 1 ತಿಂಗಳಲ್ಲಿ 38,000ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಆಗಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಜ್ಯಮಟ್ಟದಲ್ಲಿ ಆರಂಭಿಸಿರುವ ‘ನನ್ನ ಶಾಲೆ ನನ್ನ ಜವಾಬ್ದಾರಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಎಲ್‌ಕೆಜಿ, ಯುಕೆಜಿ ನಂತರ ಮಕ್ಕಳು ಅಲ್ಲಿಯೇ ಶಿಕ್ಷಣ ಮುಂದುವರಿಸುವುದರಿಂದ ಸರ್ಕಾರಿ ಶಾಲೆಗಳ ಬಲವರ್ಧನೆಗೂ ನೆರವಾಗಲಿದೆ. ಮಾಂಟೆಸ್ಸರಿ ತರಗತಿಯನ್ನು ಹಂತಹಂತವಾಗಿ ರಾಜ್ಯದಾದ್ಯಂತ ವಿಸ್ತರಿಸಲಾಗುವುದು’ ಎಂದರು.

₹ 1,000 ಕೋಟಿ ನೆರವು ನಿರೀಕ್ಷೆ:

ರಾಜ್ಯದಲ್ಲಿ 46,000 ಸರ್ಕಾರಿ ಶಾಲೆಗಳ ನಿರ್ವಹಣೆಗೆ ವಾರ್ಷಿಕ ₹ 44,000 ಕೋಟಿ ವ್ಯಯಿಸಲಾಗುತ್ತಿದೆ. ಸರ್ಕಾರದ ಅನುದಾನದಿಂದಲೇ ಎಲ್ಲ ಶಾಲೆಗಳ ಅಭಿವೃದ್ಧಿ ಸಾಧ್ಯವಾಗದು. ವಿದ್ಯಾರ್ಥಿಗಳ ಬಗ್ಗೆ ಜನಸಾಮಾನ್ಯರಲ್ಲಿ ಕಾಳಜಿ ಹೆಚ್ಚಿಸಲು ‘ನನ್ನ ಶಾಲೆ, ನನ್ನ ಜವಾಬ್ದಾರಿ’ ಕಾರ್ಯಕ್ರಮ ಆರಂಭಿಸಲಾಗಿದೆ. ಇದರಡಿ ಈ ವರ್ಷ ಸಮುದಾಯದಿಂದ ₹ 1,000 ಕೋಟಿ ಆರ್ಥಿಕ ನೆರವು ದೊರೆಯುವ ನಿರೀಕ್ಷೆ ಇದೆ ಎಂದರು.

ADVERTISEMENT

‘ಮಂಡ್ಯ ಜಿಲ್ಲೆ ಮಳವಳ್ಳಿ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನಲ್ಲಿ ಹಳೆಯ ವಿದ್ಯಾರ್ಥಿಗಳು ₹ 6 ಕೋಟಿಗೂ ಅಧಿಕ ಮೊತ್ತದ ನೆರವು ನೀಡಿ ಶಾಲಾ ಕಟ್ಟಡ ಕಟ್ಟಿಸಿಕೊಟ್ಟಿದ್ದಾರೆ. ಈ ಮಾದರಿ ಕಾರ್ಯ ಎಲ್ಲರಿಗೂ ಸ್ಫೂರ್ತಿ ಆಗಲಿ’ ಎಂದು ಆಶಿಸಿದರು.

‘ನನ್ನ ಶಾಲೆ ನನ್ನ ಜವಾಬ್ದಾರಿ’ ಅಡಿ ಸರ್ಕಾರಿ ಶಾಲೆಗಳಲ್ಲಿ ಕಲಿತು ಉನ್ನತ ಹುದ್ದೆಯಲ್ಲಿರುವವರು ಹಳೆಯ ವಿದ್ಯಾರ್ಥಿಗಳು ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬಹುದು. ಆಯಾ ಶಾಲಾ ಆಡಳಿತ ಸಂಪರ್ಕಿಸಬಹುದು. ಇದಕ್ಕೆ ತೆರಿಗೆ ವಿನಾಯ್ತಿ ಇದೆ.
–ಮಧು ಬಂಗಾರಪ್ಪ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ
ಬಂಗಾರಪ್ಪ ಓದಿದ್ದ ಶಾಲೆಗೆ ₹10 ಲಕ್ಷ ಮೊತ್ತದ ನೆರವು
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಓದಿದ್ದ ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಚಿವ ಮಧು ಬಂಗಾರಪ್ಪ ₹ 10 ಲಕ್ಷ ಮೌಲ್ಯದ ಪರಿಕರಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿ 'ನನ್ನ ಶಾಲೆ ನನ್ನ ಜವಾಬ್ದಾರಿ' ಕಾರ್ಯಕ್ರಮಕ್ಕೆ ವಿಶಿಷ್ಟವಾಗಿ ಚಾಲನೆ ನೀಡಿದರು. ಸಚಿವರು ನೀಡಿದ ಕೊಡುಗೆಯಲ್ಲಿ ಕಂಪ್ಯೂಟರ್ ಯುಪಿಎಸ್ ಸ್ನಾರ್ಟ್ ಕ್ಲಾಸ್ ಗ್ರಂಥಾಲಯಕ್ಕೆ ಪುಸ್ತಕಗಳು ಸೇರಿದಂತೆ ಪಠ್ಯ ಹಾಗೂ ಕ್ರೀಡೆಗೆ ಪೂರಕವಾದ ಪರಿಕರಗಳು ಒಳಗೊಂಡಿವೆ. ಈ ವೇಳೆ ಮಧು ಬಂಗಾರಪ್ಪ ಪತ್ನಿ ಅನಿತಾ ಸೊರಬ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಕಾಂಗ್ರೆಸ್ ಮುಖಂಡ ನಾಗರಾಜಗೌಡ ಬಗರ್‌ಹುಕುಂ ಸಮಿತಿ ಅಧ್ಯಕ್ಷ ಶೇಖರ್ ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.