ತೀರ್ಥಹಳ್ಳಿಯ ಸರ್ಕಾರಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳು ಗುರುವಾರ ಮುಂಜಾನೆ ಮಳೆಯ ನಡುವೆ ಕಾಲೇಜಿಗೆ ಸಾಗಿ ಬಂದರು
ಪ್ರಜಾವಾಣಿ ಚಿತ್ರ: ವಿ.ನಿರಂಜನ
ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಗುರುವಾರ ಜಿಲ್ಲೆಯಲ್ಲಿ ತೀರ್ಥಹಳ್ಳಿ ತಾಲ್ಲೂಕು ಹಾಗೂ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲ್ಲೂಕಿನ ಚಕ್ರಾದ ವಾರಾಹಿ ಯೋಜನಾ ಪ್ರದೇಶದಲ್ಲಿ ದಾಖಲೆಯ 19.5 ಸೆಂ.ಮೀ ಮಳೆ ಆಗಿದೆ. ಯಡೂರಿನಲ್ಲಿ 14.6 ಹಾಗೂ ಮಾಸ್ತಿಕಟ್ಟೆಯಲ್ಲಿ 14 ಸೆಂ.ಮೀ ಮಳೆ ಸುರಿದಿದೆ.
ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ:
ಮಳೆ ಬಿರುಸುಗೊಂಡಿರುವುದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳಹರಿವು ಏರಿಕೆ ಆಗಿದೆ. ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು 55,337 ಕ್ಯುಸೆಕ್ ಗೆ ಏರಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಟ ನೀರಿನಮಟ್ಟ 1819 ಅಡಿ. ಸದ್ಯ 1781.55 ಅಡಿ ನೀರಿನ ಸಂಗ್ರಹ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 1745.60 ಅಡಿ ನೀರು ಇತ್ತು.
ಗಾಜನೂರಿನ ತುಂಗಾ ಜಲಾಶಯಕ್ಕೆ 44,158 ಕ್ಯುಸೆಕ್ ಗೆ ಹೆಚ್ಚಳಗೊಂಡಿದೆ. ತುಂಗಾ ಹಾಗೂ ಶಿಕಾರಿಪುರದ ಅಂಜನಾಪುರ ಜಲಾಶಯ ಭರ್ತಿ ಆಗಿವೆ. ತುಂಗಾ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ಶಿವಮೊಗ್ಗದ ಹೃದಯ ಭಾಗದಲ್ಲಿ ಹರಿಯುವ ತುಂಗೆ ಮೈದುಂಬಿದ್ದಾಳೆ.
ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಒಳಹರಿವು 22,407 ಕ್ಯುಸೆಕ್ ಇದ್ದು, ನೀರಿನಮಟ್ಟ 157.1 ಅಡಿಗೆ ಏರಿಕೆಯಾಗಿದೆ. ಜಲಾಶಯhದ ಗರಿಷ್ಠ ನೀರಿನ ಮಟ್ಟ 186 ಅಡಿ. ಕಳೆದ ವರ್ಷ ಇದೇ ಅವಧಿಯಲ್ಲಿ ಭದ್ರೆಯಲ್ಲಿ 120 ಅಡಿ ನೀರಿನ ಸಂಗ್ರಹವಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.