ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎನ್ಎಸ್ಯುಐ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಮೆಗ್ಗಾನ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ತುರ್ತು ಚಿಕಿತ್ಸೆ ಸಮಯದಲ್ಲೂ ವೈದ್ಯರು ಸಿಗುವುದಿಲ್ಲ. ವೈದ್ಯರ ಅನುಪಸ್ಥಿತಿಯಲ್ಲಿ ಇಲ್ಲಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳೇ ಚಿಕಿತ್ಸೆ ನೀಡುತ್ತಾರೆ. ವಾರ್ಡ್ಗೆ ಕಳುಹಿಸುತ್ತಿದ್ದಾರೆ ಎಂದು ದೂರಿದರು.
ಸರ್ಕಾರ ಕೋಟ್ಯಂತರ ಹಣ ಆಸ್ಪತ್ರೆ ನಿರ್ವಹಣೆಗೆ ಖರ್ಚು ಮಾಡುತ್ತಿದೆ. ಆದರೆ, ಅಲ್ಲಿ ಯಾವ ಸೌಲಭ್ಯಗಳೂ ಇಲ್ಲ. ಈ ಬಗ್ಗ್ಗೆಆಸ್ಪತ್ರೆ ಆಡಳಿತ ಮಂಡಳಿ ತಲೆಕೆಡಿಸಿಕೊಂಡಿಲ್ಲ. ಶಾಸಕರು, ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಅವ್ಯವಸ್ಥೆ ಸರಿಪಡಿಸುವ ಭರವಸೆ ನೀಡಿದ್ದರೂ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕು. ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಎನ್ಎಸ್ಯುಐ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್, ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ನಗರ ಪಾಲಿಕೆ ಸದಸ್ಯ ಬಿ.ಎ. ರಮೇಶ್ ಹೆಗ್ಡೆ, ಕಾಂಗ್ರೆಸ್ ಮುಖಂಡರಾದ ಅಮರಪಲ್ಲಿ ಸುರೇಶ್, ಗಿರೀಶ್, ಯುವ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡರಾದ ಮಧುಸೂದನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ, ಅಮರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್, ಅಬ್ದುಲ್ ಸತ್ತಾರ್, ಮಲವಗೊಪ್ಪ ಶಿವು, ರವಿ ಕಾಟಿಕೆರೆ, ವೆಂಕಟೇಶ್, ಪ್ರಸನ್ನ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.