ರಿಪ್ಪನ್ಪೇಟೆ: ಪಟ್ಟಣದ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ನಾಡಕಚೇರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ಈ ವೇಳೆ ಶೇಷಪ್ಪ ಎಂಬುವವರು ಶಾಸಕರ ಬಳಿ ‘ಗ್ರಾಮ ಸಹಾಯಕರು ಬೆಳಿಗ್ಗೆಯಿಂದ ಕಚೇರಿಗೆ ಬಂದಿಲ್ಲ’ ಎಂದು ದೂರಿದರು.
‘ಹೋಬಳಿ ಕಚೇರಿಗೆ ಬರುವ ರೈತರು ಮತ್ತು ಸಾರ್ವಜನಿಕರಿಂದ ದೂರು ಬಾರದಂತೆ ಸಮಯ ಪಾಲನೆಯೊಂದಿಗೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಉಪತಹಶೀಲ್ದಾರ್ ಹುಚ್ಚರಾಯಪ್ಪ ಅವರಿಗೆ ಸೂಚಿಸಿದ ಶಾಸಕರು, ‘ಮುಂದಿನ ದಿನಗಳಲ್ಲಿ ಸಾರ್ವಜನಿಕರ ದೂರುಗಳು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.
ಹೊಸ ಕಟ್ಟಡಕ್ಕೆ ಪ್ರಸ್ತಾವ ಸಲ್ಲಿಸಲು ಸೂಚನೆ: ಲೋಕೋಪಯೋಗಿ ಇಲಾಖೆಯ ಶಿಥಿಲ ಕಟ್ಟಡದಲ್ಲಿ ನಾಡಕಚೇರಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಸ್ಥಳೀಯರು ಗಮನ ಸೆಳೆದಾಗ ‘ಈ ಶಿಥಿಲ ಕಟ್ಟಡವನ್ನು ತೆರವುಗೊಳಿಸಿ ಇಲ್ಲಿಯೇ ಹೊಸ ಕಟ್ಟಡ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಮಳೆಗಾಲ ಆರಂಭದಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ನೆರೆ ಹಾನಿ ಉಂಟಾದಲ್ಲಿ ತಕ್ಷಣವೇ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ, ತುರ್ತು ಪರಿಹಾರ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿ’ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಅರಸಾಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉಮಾಕರ್ ಸೇರಿದಂತೆ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೇಳೂರು ಅಭಿಮಾನಿ ಬಳಗದವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.