ADVERTISEMENT

ಶಿವಮೊಗ್ಗ: ಮುಂಗಾರು ಮಳೆಗೆ ಮೂವರ ಸಾವು, 73 ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 10:14 IST
Last Updated 19 ಜೂನ್ 2021, 10:14 IST
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಮಾತನಾಡಿದರು.   

ಶಿವಮೊಗ್ಗ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಹೀಗೆ ಮುಂದುವರಿದರೆ ಅತಿವೃಷ್ಟಿ ಸೃಷ್ಟಿಸುವ ಅನಾಹುತಗಳನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಹೇಳಿದರು.

ಮುಂಗಾರು ಮಳೆ ಸಮಯದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಶನಿವಾರ ಮುಖ್ಯಮಂತ್ರಿ ಜತೆ ನಡೆದ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿ ಅವರು ಮಾಹಿತಿ ನೀಡಿದರು.

18 ದಿನಗಳಲ್ಲಿ ಸರಾಸರಿಗಿಂತ ಶೇ 20ರಷ್ಟು ಹೆಚ್ಚಿನ ಮಳೆಯಾಗಿದೆ. ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಒಂದು ವಾರದಿಂದ ಸಾಕಷ್ಟು ನೀರು ಹರಿದು ಬರುತ್ತಿದೆ. ತುಂಗಾಭದ್ರಾ ಜಲಾಶಯ ಬಹುತೇಕ ತುಂಬಿದೆ. ಎಲ್ಲಾ ಜಲಾಶಯಗಳ ನೀರಿನಮಟ್ಟದ ಮೇಲೆ ನಿರಂತರ ನಿಗಾ ವಹಿಸಲಾಗಿದೆ. 67 ಗ್ರಾಮ ಪಂಚಾಯತಿಯ 163 ಗ್ರಾಮಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 74 ಪ್ರದೇಶಗಳು, 18 ಮುಖ್ಯ ರಸ್ತೆಗಳನ್ನು ಅತಿವೃಷ್ಟಿಯಿಂದ ತೊಂದರೆ ಉಂಟಾಗಬಹುದಾದ ಸ್ಥಳಗಳೆಂದು ಗುರುತಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ ತಾಲ್ಲೂಕುಮಟ್ಟದಲ್ಲೂ ಕಂಟ್ರೋಲ್ ರೂಂ ಆರಂಭಿಸಲಾಗಿದೆ ಎಂದು ವಿವರ ನೀಡಿದರು.

ADVERTISEMENT

ಬೇಡಿಕೆಗಿಂತ ಅಧಿಕ ಬಿತ್ತನೆಬೀಜ ದಾಸ್ತಾನು: ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆ ಇಲ್ಲ. 26,459 ಕ್ವಿಂಟಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಇದೆ. 30,242 ಕ್ವಿಂಟಲ್ ದಾಸ್ತಾನಿದೆ. ಎಲ್ಲಾ ಕಡೆ ಕೃಷಿ ಚಟುವಟಿಕೆ ಆರಂಭವಾಗಿದೆ. ಈಗಾಗಲೇ 3,341 ಕ್ವಿಂಟಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ರಸಗೊಬ್ಬರ ಬೇಡಿಕೆಗೆ ಅನುಸಾರವಾಗಿ ಹಂತ ಹಂತವಾಗಿ ದಾಸ್ತಾನು ಮಾಡಲಾಗುತ್ತಿದೆ. ಜೂನ್ ಅಂತ್ಯದವರೆಗೆ 52 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದೆ. 1.07 ಟನ್ ದಾಸ್ತಾನಿದೆ ಎಂದು ಅಂಕಿಅಂಶ ಪ್ರಸ್ತುತ ಪಡಿಸಿದರು.

ಪ್ರಸ್ತುತ ಸಾಲಿನಲ್ಲಿ ಮಳೆಯಿಂದ ಮೂವರು ಮೃತಪಟ್ಟಿದ್ದಾರೆ. ₹ 15 ಲಕ್ಷ ಪರಿಹಾರ ನೀಡಲಾಗಿದೆ. ಎರಡು ಜಾನುವಾರು ಮೃತಪಟ್ಟಿವೆ. ₹ 60 ಸಾವಿರ ನೀಡಲಾಗಿದೆ. ನಾಲ್ಕು ಮನೆಗಳು ಶೇ 75ರಷ್ಟು ಹಾಗೂ 69 ಮನೆಗಳು ಸ್ವಲ್ಪಮಟ್ಟಿನ ಹಾನಿಗೀಡಾಗಿದೆ. ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಅತಿವೃಷ್ಟಿಯಿಂದ ಮಾನವ ಜೀವ ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಗರಿಷ್ಠ ಎಚ್ಚರ ವಹಿಸಬೇಕು. ಜಾನುವಾರುಗಳಿಗೆ ಸಾಕಷ್ಟು ಮೇವು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದರೆ ತಕ್ಷಣ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ವ್ಯವಸ್ಥೆ ಮಾಡಬೇಕು. ಅತಿವೃಷ್ಟಿ ಪರಿಹಾರ ಕಾಮಗಾರಿಗಳಿಗೆ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ಈಗಾಗಲೆ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.