ಮಲೆನಾಡಿನಲ್ಲಿ ಮಳೆ ಹೆಚ್ಚಳದಿಂದ ಶಿವಮೊಗ್ಗದಲ್ಲಿ ಗುರುವಾರ ತುಂಗಾ ನದಿ ಮೈದುಂಬಿದ ನೋಟ
ಪ್ರಜಾವಾಣಿ ಚಿತ್ರ: ಶಿವಮೊಗ್ಗ ನಾಗರಾಜ್
ಶಿವಮೊಗ್ಗ: ಮಲೆನಾಡಿನಲ್ಲಿ ಬಿರುಸುಗೊಂಡಿರುವ ಮಳೆ ದಿನವಿಡೀ ಸುರಿಯುತ್ತಿದೆ. ನದಿ, ಹಳ್ಳ, ತೊರೆ, ಕೆರೆ, ಜಲಾಶಯಗಳು ಮೈದುಂಬಿವೆ. ಸದಾ ಮೋಡ ಮುಸುಕಿದ ವಾತಾವರಣ ಇದ್ದು, ಸೂರ್ಯನ ದರ್ಶನವೇ ಅಪರೂಪವಾಗಿದೆ. ಕಣಿವೆ, ಗುಡ್ಡ ಸಾಲುಗಳಲ್ಲಿ ಜಲಪಾತಗಳು ಜೀವ ಪಡೆದಿದೆ.
ಮುಂಜಾಗ್ರತಾ ಕ್ರಮವಾಗಿ ಗುರುವಾರ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸನಗರ ತಾಲ್ಲೂಕಿನ ವಾರಾಹಿ ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹುಲಿಕಲ್ನಲ್ಲಿ 27 ಸೆಂ.ಮೀ, ಯಡೂರಿನಲ್ಲಿ 23.4, ಮಾಸ್ತಿಕಟ್ಟೆ 21.7, ಮಾಣಿ 20.7, ಸಾವೆಹಕ್ಲು 15.9 ಸೆಂ.ಮೀ ಮಳೆ ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ 16.64 ಸೆಂ.ಮೀ ಮಳೆ ಸುರಿದಿದೆ.
ದ.ಕ, ಚಿಕ್ಕಮಗಳೂರು: ಧಾರಾಕಾರ ಮಳೆ
ಮಂಗಳೂರು/ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಬುಧವಾರ ರಾತ್ರಿ ಇಡೀ ಹಾಗೂ ಗುರುವಾರ ಉತ್ತಮ ಮಳೆಯಾಗಿದೆ. ಭಾರಿ ಮಳೆಯ ಮುನ್ಸೂಚನೆ ಇದ್ದುದರಿಂದ ಕಡಬ ಮತ್ತು ಸುಳ್ಯ ತಾಲ್ಲೂಕುಗಳ ಅಂಗನವಾಡಿ ಕೇಂದ್ರ, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ನೀಡಲಾಗಿತ್ತು.
ಗುರುವಾರ ಬೆಳಿಗ್ಗೆ 8.30ರವರೆಗೆ ಪುತ್ತೂರು ತಾಲ್ಲೂಕಿನ ಬೆಳಂದೂರಿನಲ್ಲಿ 13 ಸೆಂ.ಮೀ, ಕೊಳ್ತಿಗೆ 11, ಅರಿಯಡ್ಕ 11, ಸುಳ್ಯ ತಾಲ್ಲೂಕಿನಗುತ್ತಿಗಾರಿನಲ್ಲಿ12, ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ 11, ಬಾರ್ಯಾ 10, ಬಂಟ್ವಾಳ ತಾಲ್ಲೂಕಿನ ಕಾವಳಮೂಡೂರಿನಲ್ಲಿ 10 ಸೆಂ.ಮೀ ಮಳೆಯಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನದ ತನಕ ಧಾರಾಕಾರವಾಗಿ ಸುರಿಯಿತು. ನರಸಿಂಹರಾಜಪುರ, ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲ್ಲೂಕಿನ ಹಲವೆಡೆ ಮಳೆ ಸುರಿಯಿತು. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಉತ್ತಮವಾಗಿ ಮಳೆಯಾಗಿರುವುದರಿಂದ ಕಡೂರು ತಾಲ್ಲೂಕಿನ ಐತಿಹಾಸಿಕ ಮದಗದ ಕೆರೆಗೆ ನೀರಿನ ಹರಿವು ಹೆಚ್ಚಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲ್ಲೂಕುಗಳ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿ, ಶಿಶುಪಾಲನಾ ಕೇಂದ್ರಗಳಿಗೆ ಜು.4ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಕೊಡಗಿನಲ್ಲಿ ಹೆಚ್ಚಿದ ಮಳೆ, ‘ರೆಡ್ ಅಲರ್ಟ್’
ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬಿರುಸಿನ ಮಳೆ ಮುಂದುವರಿದಿದೆ. ಹವಾಮಾನ ಇಲಾಖೆಯು ಶುಕ್ರವಾರ (ಜೂನ್ 4) ಬೆಳಿಗ್ಗೆ 8.30ರವರೆಗೂ ‘ರೆಡ್ ಅಲರ್ಟ್’ ಘೋಷಿಸಿದೆ.
ಭಾರಿ ಮಳೆಯಿಂದ ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಡಿಕೇರಿ ನಗರದಲ್ಲಿ ಬುಧವಾರ ತಡರಾತ್ರಿಯಿಂದ ಗುರುವಾರ ಮಧ್ಯಾಹ್ನದವರೆಗೂ ಮಳೆ ಅಬ್ಬರಿಸಿತು. ಇದರಿಂದ ಹಾರಂಗಿ ಜಲಾಶಯದ ಒಳ ಹರಿವು ಹೆಚ್ಚಾಗಿದ್ದು, ನದಿಗೆ 10 ಸಾವಿರ ಕ್ಯೂಸೆಕ್ ನೀರನ್ನು ಹರಿಸಲಾಯಿತು. ನಾಪೋಕ್ಲು ಭಾಗದಲ್ಲಿ ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.
ಶಾಂತಳ್ಳಿಯಲ್ಲಿ 14 ಸೆಂ.ಮೀ. ಮಳೆಯಾಗಿದೆ. ಭಾಗಮಂಡಲ, ಸೋಮವಾರಪೇಟೆ 8, ಶನಿವಾರಸಂತೆ 6, ಮಡಿಕೇರಿ, ನಾಪೋಕ್ಲು, ಸಂಪಾಜೆ, ವಿರಾಜಪೇಟೆ, ಹುದಿಕೇರಿಯಲ್ಲಿ ತಲಾ 5 ಸೆಂ.ಮೀ. ಮಳೆ ಸುರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.