ADVERTISEMENT

ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 6:05 IST
Last Updated 26 ಏಪ್ರಿಲ್ 2022, 6:05 IST

ಶಿವಮೊಗ್ಗ: ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣವನ್ನು ಶೇ‌ 7.5ಕ್ಕೆ ಹೆಚ್ಚಿಸಬೇಕು ಎಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಜಿಲ್ಲಾಧಿಕಾರಿ ಬಿ. ಶಿವಪ್ಪ ಆಗ್ರಹಿಸಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರು 75 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 15 ದಿನಗಳೊಳಗೆ ಬೇಡಿಕೆ ಈಡೇರಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಈಗ ತಿಂಗಳುಗಳಾದರೂ ಯಾವುದೇ ಉತ್ತರ ನೀಡಿಲ್ಲ’ ಎಂದು ದೂರಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಬೇಡಿಕೆ ನ್ಯಾಯ ಸಮ್ಮತವಾಗಿರುವುದರಿಂದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ADVERTISEMENT

ಶೇ 3ರಷ್ಟು ಮೀಸಲಾತಿಯು 1958ರಲ್ಲಿ ನಿಗದಿಯಾಗಿದೆ. ಆದರೆ, ಇಂದು ಜನಸಂಖ್ಯೆ ಹೆಚ್ಚಿದೆ. ಉಪ ಪಂಗಡಗಳು ಕೂಡ ಪರಿಶಿಷ್ಟ ವರ್ಗಕ್ಕೆ ಸೇರಿಕೊಂಡಿವೆ. ಮೀಸಲಾತಿ ಪ್ರಮಾಣವನ್ನು ಎಂದೋ ಹೆಚ್ಚಿಸಬೇಕಿತ್ತು. ಆದರೆ, ಇವತ್ತಿನವರೆಗೂ ಅಷ್ಟೇ ಇದೆ. ಇದರಿಂದ ಸಮುದಾಯದ ವಿದ್ಯಾರ್ಥಿ ವರ್ಗ ಹಾಗೂ ನಿರುದ್ಯೋಗಿಗಳಿಗೆ ಬಹುದೊಡ್ಡ ಅನ್ಯಾಯವಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕ್ರಿಯಾ ಸಮಿತಿ ಪ್ರಮುಖರಾದ ಮೃತ್ಯುಂಜಯ ಕೆ.ಎಸ್., ಬಸವರಾಜಪ್ಪ, ಎಚ್.ಆರ್. ಹನುಮಂತಪ್ಪ, ಮಲ್ಲೇಶಪ್ಪ, ಸಂದೇಶ್, ಸತೀಶ್, ಲಕ್ಷ್ಮಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.