ADVERTISEMENT

ಹೊಸೂರಿನಲ್ಲಿ ಉಪಾಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2021, 6:19 IST
Last Updated 16 ನವೆಂಬರ್ 2021, 6:19 IST
ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.   

ಆನಂದಪುರ: ಸಮೀಪದ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಹಾರ ಸೇವಿಸಿದ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಂದಿತಳೆಯ ಹೊಸೂರಿನ ಶಾಖೆಯ ಆವರಣದಲ್ಲಿ ಶನಿವಾರ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನ ಗೋದಾಮು ಪೂಜೆ ಹಾಗೂ ಸಂಘದ ವಾರ್ಷಿಕ ಸಭೆ ನಡೆಸಲಾಗಿತ್ತು. ಕಾರ್ಯಕ್ರಮದ ನಂತರ ಉಪಾಹಾರ ನೀಡಲಾಗಿತ್ತು. ಉಪಾಹಾರ ಸೇವಿಸಿದ 100ಕ್ಕೂ ಹೆಚ್ಚು ಮಂದಿಯಲ್ಲಿ ಹೊಟ್ಟೆನೋವು, ವಾಂತಿ, ಸುಸ್ತು ಕಾಣಿಸಿಕೊಂಡಿದೆ. ಕೆಲವರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲವರು ಖಾಸಗಿ ಕ್ಲಿನಿಕ್ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜ್ ಮಾತನಾಡಿ, ‘ಕೇವಲ ಪುಲಾವ್ ಸೇವಿಸಿದವರಿಗೆ ಯಾವುದೇ ತೊಂದರೆ ಆಗಿಲ್ಲ. ಮೊಸರನ್ನ ಸೇವಿಸಿದವರಿಗೆ ಮಾತ್ರ ತೊಂದರೆಯಾಗಿದೆ. 750ಕ್ಕೂ ಹೆಚ್ಚು ಜನರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮುಂಜಾಗ್ರತೆ ವಹಿಸಬೇಕಾಗಿತ್ತು. ಚಿಕಿತ್ಸೆ ಬಗ್ಗೆಯೂ ವಿಶೇಷ ಕಾಳಜಿ ವಹಿಸಿಲ್ಲ’ ಎಂದು ಆರೋಪಿಸಿದರು.

ADVERTISEMENT

ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಕಾಂತೇಶ್ ಮಾತನಾಡಿ, ‘ಆಹಾರದಲ್ಲಿನ ವ್ಯತ್ಯಾಸದಿಂದಾಗಿ ತೊಂದರೆ ಉಂಟಾಗಿದೆ. ದೊಡ್ಡ ಪ್ರಮಾಣದ ಅನಾಹುತ ಸಂಭವಿಸಿಲ್ಲ. ಚಿಕಿತ್ಸೆ ನೀಡಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.