ADVERTISEMENT

ಹುಣಸೋಡು ಸ್ಫೋಟ ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ: ಸಚಿವ ನಿರಾಣಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 11:37 IST
Last Updated 22 ಜನವರಿ 2021, 11:37 IST
ಸ್ಫೋಟಗೊಂಡ ಲಾರಿ ಅವಶೇಷ ವೀಕ್ಷಿಸಿದ ಸಚಿವ ಮುರುಗೇಶ್ ನಿರಾಣಿ
ಸ್ಫೋಟಗೊಂಡ ಲಾರಿ ಅವಶೇಷ ವೀಕ್ಷಿಸಿದ ಸಚಿವ ಮುರುಗೇಶ್ ನಿರಾಣಿ   

ಶಿವಮೊಗ್ಗ: ಮುಖ್ಯಮಂತ್ರಿ ಜತೆ ಚರ್ಚಿಸಿದ ಬಳಿಕ ಜಿಲ್ಲೆಯ ಹುಣಸೋಡು ಸ್ಫೋಟ ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ವರು ಸುದ್ದಿಗಾರರ ಜತೆ ಮಾತನಾಡಿದರು.

ಗಣಿಗಾರಿಕೆ ಅಧಿಕೃತವಾಗಿದೆಯೇ? ಅನಧಿಕೃತವೇ? ಭಾರಿ ಪ್ರಮಾಣದ ಸ್ಫೋಟಕ ಹೇಗೆ ತಂದರು? ಸಾಗಣೆ ವೇಳೆ ನಿಯಮ ಉಲ್ಲಂಘಿಸಲಾಗಿದೆಯೇ? ಇದರ ಹಿಂದೆ ಯಾರು ಇದ್ದಾರೆ ಎಂಬ ಕುರಿತು ಸಮಗ್ರ ತನಿಖೆ ನಡೆಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಇಂತಹ ದುರ್ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ರಾಜ್ಯದ ಅಭಿವೃದ್ಧಿಗೆ ಜಲ್ಲಿ ಕಲ್ಲುಗಳ ಪೂರೈಕೆ ಅನಿವಾರ್ಯ. ಆದರೆ, ಪರವಾನಿಗೆ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುವುದಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಅನಧಿಕೃತ ಗಣಿಗಾರಿಕೆ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ತಲಾ ₹ 5 ಲಕ್ಷ ಪರಿಹಾರ: ಸ್ಫೋಟದಲ್ಲಿ ಐವರು ಮೃತಪಟ್ಟಿರುವುದು ಇದುವರೆಗೂ ದೃಢಪಟ್ಟಿದೆ. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಾರ್ಮಿಕ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದಲೂ ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ಹಾಗೂ ಸಹಾಯ ಸೌಲಭ್ಯ ಒದಗಿಸಲಾಗುವುದು ಎಂದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.