ತೀರ್ಥಹಳ್ಳಿ: ಕಾಂಗ್ರೆಸ್ ಜಾತಿಗಳನ್ನು ಒಡೆದು ಅಂಧ ದರ್ಬಾರ್ ನಡೆಸುತ್ತಿದೆ. ನರೇಂದ್ರ ಮೋದಿ ಅವರು ಮುಸ್ಲಿಮರನ್ನು ಬಿಟ್ಟು ಯಾವುದೇ ಕಾರ್ಯಕ್ರಮ ರೂಪಿಸಿಲ್ಲ. ಭಾರತದಲ್ಲಿ ಮುಸ್ಲಿಂ ಸಮುದಾಯ ಸುರಕ್ಷಿತವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ಇಲ್ಲಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಗುರುವಾರ ನಡೆದ ಜೆಡಿಎಸ್-ಬಿಜೆಪಿ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೋಮುವಾದಿ ಶಕ್ತಿಗಳು ಬಾಂಬ್ ಸಿಡಿಸಿ ಖುಷಿ ಪಡುವುದನ್ನು ಸಹಿಸಲು ಸಾಧ್ಯವಿಲ್ಲ. ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಶಕ್ತಿ ಬಂದಿದೆ. ಬೂತ್ ಮಟ್ಟದಿಂದಲೂ ಕಾರ್ಯಕರ್ತರ ನಡುವೆ ಸಮನ್ವಯತೆ ಕಾಯ್ದುಕೊಳ್ಳಲಾಗಿದೆ ಎಂದು ನುಡಿದರು.
ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ನರೇಂದ್ರ ಮೋದಿ ಶೇ 20ರಷ್ಟು ಬಡವರನ್ನು ಬಡತನ ರೇಖೆಯಿಂದ ಮೇಲಕ್ಕೆತ್ತಿದ್ದಾರೆ. ಆರ್ಥಿಕ ಚೈತನ್ಯದಿಂದ ಬಡವರ ಕೊಳ್ಳುವ ಸಾಮರ್ಥ್ಯ ವೃದ್ಧಿಸಿದೆ ಎಂದರು.
ಪ್ರಧಾನಿ ಮೋದಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನ ಬೆಂಬಲಿಸುತ್ತಾರೆ. ಕಾಂಗ್ರೆಸ್ ಆಡಳಿತಕ್ಕೆ ವಾರಂಟಿ ಇಲ್ಲ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕುಣಜೆ ಕಿರಣ್ ಪ್ರಭಾಕರ್ ಹೇಳಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ವೀಕ್ಷಕ ಮಾಜಿ ಶಾಸಕ ರಘುಪತಿ ಭಟ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ನವೀನ್ ಹೆದ್ದೂರು, ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ನಾಗರಾಜ್, ಎಸ್ಸಿ–ಎಸ್ಟಿ ಘಟಕದ ಅಧ್ಯಕ್ಷ ಆನಂದ ಇದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಡೂರು ರಾಜಾರಾಂ ಗೈರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.