ADVERTISEMENT

ನಾಗಸಮುದ್ರ: 28ಕ್ಕೆ ಹುತಾತ್ಮ ರೈತರಿಗೆ ಗೌರವ ಸಮರ್ಪಣೆ

ಎಚ್.ಆರ್. ಬಸವರಾಜಪ್ಪ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 4:49 IST
Last Updated 26 ಅಕ್ಟೋಬರ್ 2021, 4:49 IST
ಎಚ್.ಆರ್.ಬಸವರಾಜಪ್ಪ
ಎಚ್.ಆರ್.ಬಸವರಾಜಪ್ಪ   

ಶಿವಮೊಗ್ಗ: ಭದ್ರಾವತಿ ತಾಲ್ಲೂಕು ನಾಗಸಮುದ್ರದ ಮಲ್ಲೇಶ್ವರ ಕಲ್ಯಾಣ ಮಂಟಪದಲ್ಲಿಅ.28ರಂದು ಸಂಜೆ 4ಕ್ಕೆ ಹುತಾತ್ಮ ರೈತರಿಗೆ ಗೌರವ ಸಮರ್ಪಣೆ ಹಾಗೂ ರೈತ ವಿರೋಧಿ ಕೃಷಿ ಕಾಯ್ದೆಗಳ ದುಷ್ಪರಿಣಾಮದ ಬಗ್ಗೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ತಿಳಿಸಿದರು.

‘ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಅವರು ವಿಚಾರಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತರಿಗೆ ಹೇಗೆ ಮಾರಕ ಎಂಬುದನ್ನು ದಾಖಲೆಗಳ ಸಮೇತ ವಿವರಿಸಲಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿರುವುದರಿಂದ ಇವುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಈಗಾಗಲೇ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ, ಬಿಜೆಪಿಯವರು ಕಾಯ್ದೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಯಾವ ದೃಷ್ಟಿಕೋನದಲ್ಲಿ ಈ ಕಾಯ್ದೆಗಳು ರೈತರಿಗೆ ಪೂರಕ ಎಂಬುದನ್ನು ದಾಖಲೆಗಳ ಸಮೇತ ಮನದಟ್ಟು ಮಾಡಿದರೆ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಹಿಂಪಡೆಯಲಾಗುವುದು’ ಎಂದರು.

ADVERTISEMENT

‘ಸರ್ಕಾರಿ ಪ್ರಾಯೋಜಿತ ಅಧಿಕಾರಿಗಳು ಹಾಗೂ ಕೆಲವು ಕೃಷಿ ವಿಜ್ಞಾನಿಗಳು ತಮ್ಮ ಬೇಳೆ ಬೇಯಿಸಿಕೊಂಡು ಉನ್ನತ ಹುದ್ದೆ ಗಿಟ್ಟಿಸಿಕೊಳ್ಳುವ ಸಲುವಾಗಿ ಕಾಯ್ದೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಯ್ದೆಗಳ ಪರವಾಗಿ ಮಾತನಾಡುವ ಯಾರು ಬೇಕಾದರೂ ಅಂದಿನ ಕಾರ್ಯಕ್ರಮಕ್ಕೆ ಬರಬಹುದೆಂದು’ ಆಹ್ವಾನ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ರಾಘವೇಂದ್ರ, ಡಾ. ಬಿ.ಎಂ.ಚಿಕ್ಕಸ್ವಾಮಿ, ಹಸಿರು ಸೇನೆ ಜಿಲ್ಲಾ ಸಂಚಾಲಕ ಎಂ.ಡಿ. ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.