
ಮಧು ಬಂಗಾರಪ್ಪ
ಬೆಂಗಳೂರು: ‘ಶಿವಮೊಗ್ಗದ 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ (ಸ್ವಾತಂತ್ರ್ಯ ಉದ್ಯಾನ) ಅಲ್ಲಮಪ್ರಭು ಹೆಸರು ಇರಿಸುವ ಮಾಡುವ ಮೂಲಕ ಜಿಲ್ಲೆಯ ಜನತರ ದಶಕಗಳ ಕನಸನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನನಸು ಮಾಡಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸಂತಸ ಹಂಚಿಕೊಂಡಿದ್ದಾರೆ.
‘ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರು ಶಿಕಾರಿಪುರದ ಬಳ್ಳಿಗಾವೆಯವರು. 12ನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅವರ ಹೆಸರನ್ನು ಶಿವಮೊಗ್ಗದ ಸ್ವಾತಂತ್ರ್ಯ ಉದ್ಯಾನಕ್ಕೆ ಇಡಬೇಕೆಂಬುದು ಜನರ ಒತ್ತಾಸೆ ಆಗಿತ್ತು. ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿರುವುದು, ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿರುವುದಕ್ಕೆ ನಿದರ್ಶನ’ ಎಂದು ಅವರು ಬಣ್ಣಿಸಿದ್ದಾರೆ.
‘ಶಿವಮೊಗ್ಗದಲ್ಲಿ ಇದೇ 12ರಂದು ನಡೆದ 5ನೇ ಗ್ಯಾರಂಟಿ ಯೋಜನೆ ‘ಯುವನಿಧಿ’ ಕಾರ್ಯಕ್ರಮದ ಸಂದರ್ಭದಲ್ಲಿ, ಉದ್ಯಾನಕ್ಕೆ ಅಲ್ಲಮಪ್ರಭು ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿತ್ತು. ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರದ ಈ ನಿರ್ಧಾರ ಅತ್ಯಂತ ಸಮಯೋಚಿತವಾಗಿದೆ’ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.