ADVERTISEMENT

21ಕ್ಕೆ ಎನ್.ಡಿ.ಸುಂದರೇಶ್ ನೆನಪಿನ ಸಭೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 13:12 IST
Last Updated 12 ಡಿಸೆಂಬರ್ 2019, 13:12 IST

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಡಿ.21ರ ಬೆಳಿಗ್ಗೆ 10ಕ್ಕೆ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರ ನೆನಪಿನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ತಿಳಿಸಿದರು.

ಎನ್.ಡಿ. ಸುಂದರೇಶ್ ನೆನಪಿನ ಜತೆಗೆ ರೈತರಿಗೆ ನ್ಯಾಯ ಸಿಗಬೇಕೆಂದು ಹೋರಾಟ ಮಾಡಿ ಪೊಲೀಸರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಸುಮಾರು 153 ರೈತರನ್ನು ನೆನಪು ಮಾಡಿಕೊಂಡು ಅವರು ಬಿಟ್ಟುಹೋದ ಹೋರಾಟವನ್ನು ಮುಂದುವರೆಸಬೇಕಾಗಿದೆ ಎಂದು ಗುರುವಾರ ಪತ್ರಿಕಾಗೊಷ್ಠಿಯಲ್ಲಿ ಹೇಳಿದರು.

ರೈತ ಸಂಘದ ಹೋರಾಟದ ಫಲವಾಗಿಯೇ ತುಂಗಾ ಏತ ನೀರಾವರಿ ಕಾರ್ಯ ಪೂರ್ಣಗೊಂಡಿದೆ. ಹಾಗೆಯೇ ಉಳಿದಿರುವ ಏತ ನೀರಾವರಿ ಯೋಜನೆಗಳು ಜಾರಿಯಾಗಬೇಕಾಗಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

ADVERTISEMENT

ರಾಜ್ಯದಲ್ಲಿ ರೈತರ ಸ್ಥಿತಿ ಕಂಗೆಟ್ಟಿದೆ. ಅತಿವೃಷ್ಟಿ, ಅನಾವೃಷ್ಟಿಗೆ ರೈತರು ಬಲಿಯಾಗಿದ್ದಾರೆ. ಗ್ರಾಮಗಳೇ ಕೊಚ್ಚಿಹೋಗಿವೆ. ಪುನರ್ ವಸತಿ ಇನ್ನೂ ಆರಂಭವಾಗಿಲ್ಲ. ಬ್ಯಾಂಕುಗಳು, ಖಾಸಗಿ ಫೈನಾನ್ಸ್‌ಗಳು ಬಲವಂತವಾಗಿ ಸಾಲ ವಸೂಲಾತಿ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹಿಟ್ಟೂರು ರಾಜು, ಶಿವಮೂರ್ತಿ, ಪಂಚಾಕ್ಷರಪ್ಪ, ಟಿ.ಎಂ.ಚಂದ್ರಪ್ಪ, ಈಶಣ್ಣ, ಜಗದೀಶ್, ಕೆ.ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.