ADVERTISEMENT

ಸಾಗರ: ನೀರು ಸರಬರಾಜಿಗೆ ಅಗತ್ಯ ಕ್ರಮ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 6:28 IST
Last Updated 9 ಅಕ್ಟೋಬರ್ 2021, 6:28 IST
ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಸುವ ಘಟಕವನ್ನು ಶುಕ್ರವಾರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಪರಿಶೀಲಿಸಿದರು
ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಸುವ ಘಟಕವನ್ನು ಶುಕ್ರವಾರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಪರಿಶೀಲಿಸಿದರು   

ಸಾಗರ: ನಗರವ್ಯಾಪ್ತಿಯಲ್ಲಿ ಸಮರ್ಪಕವಾಗಿ ನೀರು ಸರಬರಾಜು ಮಾಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ತಿಳಿಸಿದರು.

ನಗರಕ್ಕೆ ಕುಡಿಯುವ ನೀರು ಪೂರೈಸುವ ಘಟಕವನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದರು.

ಕುಡಿಯುವ ನೀರು ಪೂರೈಸುವ ಅಂಬುಗಳಲೆ ಹಾಗೂ ಬಸವನಹೊಳೆ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಕೆಲವು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಅಂಬುಗಳಲೆ ಘಟಕದಲ್ಲಿ ವಾಟರ್ ಲ್ಯೂಬ್ರಿಕೆಂಟ್ ಪಂಪ್ ತೆಗೆದು ಆಯಿಲ್ ಲ್ಯೂಬ್ರಿಕೆಂಟ್ ಪಂಪ್ ಅಳವಡಿಸಲಾಗಿದೆ. ಇದರಿಂದಾಗಿ ಅಲ್ಲಿನ ಮೋಟಾರ್ ಪಂಪ್‌ನಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ದೋಷ ನಿವಾರಣೆಯಾಗಲಿದೆ. ಪಂಪ್‌ಹೌಸ್‌ನ ಸೂಕ್ತ ನಿರ್ವಹಣೆಗಾಗಿ ತಜ್ಞ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನಗರಕ್ಕೆ ಸಮರ್ಪಕ ನೀರು ಪೂರೈಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಸಹಕಾರ ನೀಡಬೇಕು ಎಂದು ಅವರುತಿಳಿಸಿದರು.

ನಗರಸಭೆ ಉಪಾಧ್ಯಕ್ಷ ವಿ. ಮಹೇಶ್, ಪೌರಾಯುಕ್ತ ರಾಜು ಡಿ. ಬಣಕಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಎಚ್.ಕೆ. ನಾಗಪ್ಪ, ಎಂಜಿನಿಯರ್‌ಗಳಾದ ರಾಜೇಶ್, ವಿಠ್ಠಲ್ ಹೆಗಡೆ, ನಗರಸಭೆ ಸದಸ್ಯರಾದ ಕೆ.ಆರ್. ಗಣೇಶ್ ಪ್ರಸಾದ್, ಅರವಿಂದ ರಾಯ್ಕರ್, ಜನಾರ್ದನ್ ಉಡುಪ ಹಾಗೂ ಸ್ಥಳೀಯರುಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.