ಸಾಗರ: ಆರ್ಸಿಬಿ ತಂಡದ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಕಳೆದ ಬುಧವಾರ ಬೆಂಗಳೂರಿನಲ್ಲಿ ಕಾಲ್ತುಳಿತದ ಕಾರಣಕ್ಕೆ 11 ಜನ ಅಮಾಯಕರು ಮೃತಪಟ್ಟ ಪ್ರಕರಣದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ರಾಜ್ಯ ಸರ್ಕಾರ ಅವರನ್ನು ಹರಕೆಯ ಕುರಿ ಮಾಡಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಆರೋಪಿಸಿದ್ದಾರೆ.
ದಕ್ಷ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸುವ ಮೂಲಕ ರಾಜ್ಯ ಸರ್ಕಾರ ಕಾಲ್ತುಳಿತ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎನ್ನುವಂತೆ ನಡೆದುಕೊಂಡಿದೆ. ಇದು ರಾಜ್ಯದಲ್ಲಿ ರಾವಣ ರಾಜ್ಯ ಆರಂಭಗೊಂಡಿರುವ ಸಂಕೇತವಾಗಿದೆ ಎಂದು ಅವರು ಹೇಳಿಕೆಯಲ್ಲಿ ಟೀಕಿಸಿದ್ದಾರೆ.
ವಿಧಾನಸೌಧದ ಮೆಟ್ಟಿಲ ಮೇಲೆ ರಾಜ್ಯಪಾಲರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ನೋಡಿಕೊಳ್ಳಬೇಕಿತ್ತು. ಆದರೆ ರಾಜ್ಯಪಾಲರ ಉಪಸ್ಥಿತಿಯ ಕಾರ್ಯಕ್ರಮ ರಾಜಕೀಯ ಪುಡಾರಿಗಳ ಕಾರ್ಯಕ್ರಮವಾಗುವಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಅವರು ಹೇಳಿಕೆಯಲ್ಲಿ ದೂರಿದ್ದಾರೆ.
ವಿಧಾನಸೌಧದ ಎದುರು ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರ ನಿರ್ಗಮನದ ನಂತರ ರಾಷ್ಟ್ರಗೀತೆ ನುಡಿಸುವಂತಹ ಪ್ರಮಾದ ನಡೆದಿದೆ. ರಾಜ್ಯ ಸರ್ಕಾರಕ್ಕೆ ಶಿಷ್ಟಾಚಾರಗಳ ಬಗ್ಗೆ ಕಿಂಚಿತ್ತೂ ಗೌರವವಿಲ್ಲ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.