ತೀರ್ಥಹಳ್ಳಿ: ‘ಪಟ್ಟಣ ಪಂಚಾಯಿತಿ ಅಧಿಕಾರದ ಹಂಚಿಕೆ ವಿಚಾರ ಪ್ರಸ್ತಾಪವಾಗಿಲ್ಲ. ಆಯ್ಕೆಯಾದವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದರೆ ನಂತರ ಪಕ್ಷ ತೀರ್ಮಾನಿಸುತ್ತದೆ. ನಮ್ಮೊಳಗಿನ ಭಿನ್ನಾಭಿಪ್ರಾಯ ಪಕ್ಷದ ವೇದಿಕೆಯಲ್ಲಿ ಚರ್ಚಿಸಿಕೊಳ್ಳುತ್ತೇವೆ. ಎಲ್ಲವೂ ಸರಿ ಇದೆ’ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಟ್ಟಣ ಪಂಚಾಯಿತಿ ಗೆಲುವಿನ ಸಂಭ್ರಮ ಹಂಚಿಕೊಂಡು ಅವರು ಮಾತನಾಡಿದರು.
‘ಸುದೀರ್ಘ ಅವಧಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಪಟ್ಟಣದ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. 22 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಕ್ಕಿದ್ದು, ಪಟ್ಟಣದ ಅಭಿವೃದ್ಧಿಗೆ ಕಟಿಬದ್ಧರಾಗಿದ್ದೇವೆ’ ಎಂದು ಕಿಮ್ಮನೆ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಮಾತನಾಡಿ, ‘ಪಕ್ಷಭೇದ ಮರೆತು 15 ಸದಸ್ಯರು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕು. ಪಟ್ಟಣದ ಜನರಿಗೆ ಶುದ್ಧ ಕುಡಿಯುವ ನೀರು, ಒಳಚರಂಡಿ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ಸೇರಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕ್ಷೇತ್ರದ ಶಾಸಕರು ರಾಜ್ಯದ ಎರಡನೇ ದೊಡ್ಡ ಹುದ್ದೆಯಾದ ಗೃಹ ಸಚಿವ ಸ್ಥಾನ ಹೊಂದಿದ್ದು, ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡಬೇಕು. ನಗರಾಭಿವೃದ್ಧಿ, ಲೋಕೋಪಯೋಗಿ ಇಲಾಖೆ ಮೂಲಕ ಅನುದಾನ ನೀಡಬೇಕು’ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ ಗೌಡ, ಬ್ಲಾಕ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಗ್ರಾಮಾಂತರ ಅಧ್ಯಕ್ಷ ಮುಡುಬ ರಾಘವೇಂದ್ರ, ಕೆಪಿಸಿಸಿ ಸದಸ್ಯ ನಾರಾಯಣರಾವ್, ಕಾಂಗ್ರೆಸ್ ವಕ್ತಾರ ವಿಶ್ವನಾಥ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ ಶೆಟ್ಟಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸದಸ್ಯರಾದ ರಹಮತುಲ್ಲಾ ಅಸಾದಿ, ರತ್ನಾಕರ್ ಶೆಟ್ಟಿ, ನಮ್ರತ್, ಗೀತಾ ರಮೇಶ್, ಸುಶೀಲ ಶೆಟ್ಟಿ, ಮಂಜುಳಾ ನಾಗೇಂದ್ರ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.