ADVERTISEMENT

ಸಚಿವ ಸ್ಥಾನದಿಂದ ಅಶ್ವತ್ಥ ನಾರಾಯಣ ಕೈ ಬಿಡಲು ಎನ್‌ಎಸ್‌ಯುಐ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಮೇ 2022, 4:36 IST
Last Updated 6 ಮೇ 2022, 4:36 IST
ಸಚಿವ ಅಶ್ವತ್ಥ ನಾರಾಯಣ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಎನ್ಎಸ್‌ಯುಐ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಗುರುವಾರ ಲಂಚ ಪಡೆಯುವ ಅಣಕು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಸಚಿವ ಅಶ್ವತ್ಥ ನಾರಾಯಣ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಎನ್ಎಸ್‌ಯುಐ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಗುರುವಾರ ಲಂಚ ಪಡೆಯುವ ಅಣಕು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎನ್ಎಸ್‌ಯುಐ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಪಿಎಸ್ಐ ಸಮವಸ್ತ್ರ ಧರಿಸಿ, ನಕಲಿ ನೋಟುಗಳ ಹಾರ ಹಾಕಿಕೊಂಡು, ಸಚಿವ ಅಶ್ವತ್ಥ ನಾರಾಯಣರ ಮುಖವಾಡ ಧರಿಸಿ ಲಂಚ ಪಡೆಯುವ ಅಣಕು ಪ್ರದರ್ಶನ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ನಡೆಸಿದ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದರಲ್ಲಿ ಉನ್ನತ ಶಿಕ್ಷಣ ಸಚಿವರ ಸಂಬಂಧಿ ಭಾಗಿಯಾಗಿರುವುದರಿಂದ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ADVERTISEMENT

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ಹಗರಣಗಳು ನಡೆಯುತ್ತಲೇ ಇವೆ. ಪಿಎಸ್ಐ ಹುದ್ದೆಗಳ ನೇಮಕಾತಿಯೂ ಇದರಲ್ಲಿ ಸೇರ್ಪಡೆಯಾಗಿದೆ. ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಸಚಿವರ ಹೆಸರೂ ಇದರಲ್ಲಿ ಸೇರಿದೆ. ಆದ್ದರಿಂದ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ಸಿಐಡಿಗೆ ಈ ಹಗರಣದ ತನಿಖೆ ವಹಿಸಿದ್ದು, ತನಿಖೆ ನಡೆಯುತ್ತಿರುವಾಗಲೇ ಅಕ್ರಮವೆಸಗಿದವರ ಮೇಲೆ ಕ್ರಮ ಕೈಗೊಳ್ಳುವ ಬದಲು ಪ್ರಾಮಾಣಿಕ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದು ಎಷ್ಟರಮಟ್ಟಿಗೆ ಸರಿ? ಕೂಡಲೇ ಸರ್ಕಾರ ಮರು ಪರೀಕ್ಷೆ ನಡೆಸುವ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಚರಣ್, ಹರ್ಷಿತ್, ಎಸ್.ಎನ್. ವಿಜಯಕುಮಾರ್, ರವಿ, ಸಂಜಯ್, ವಿಶಾಲ್, ಸುಹಾಸ್, ವೆಂಕಟೇಶ್, ಸಂದೀಪ್, ತೌಫಿಕ್, ಮಧುಸೂದನ್, ಕೆ. ಚೇತನ್, ಜಿ.ಡಿ. ಮಂಜುನಾಥ್, ಶಿವು, ಅಬ್ದುಲ್ ಸತ್ತಾರ್, ಚಂದ್ರೋಜಿರಾವ್, ಸಾಗರ್, ಮಂಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.