ಭದ್ರಾವತಿ: ನಗರದಲ್ಲಿ ಮೂವರು ಯುವಕರು ಪ್ಯಾಲೆಸ್ಟೈನ್ ಧ್ವಜ ಹಿಡಿದು ದ್ವಿಚಕ್ರ ವಾಹನದಲ್ಲಿ ಸುತ್ತಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಮೂವರು ಯುವಕರ ವಿರುದ್ಧ ಹಳೆನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಹಮದ್ ಪೈಗಂಬರ ಜನ್ಮದಿನದ ಆಚರಣೆ ಸಂಭ್ರಮದಲ್ಲಿ ಸೆ. 8ರಂದು ನಗರದಲ್ಲಿ ಹಮ್ಮಿಕೊಂಡಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಈ ಘಟನೆ ನಡೆದಿದೆ.
ಪ್ಯಾಲೆಸ್ಟೈನ್ ಧ್ವಜ ಹಿಡಿದು ನಗರದ ರೈಲ್ವೆ ನಿಲ್ದಾಣದ ಮುಂಭಾಗ, ತಿಮ್ಮಯ್ಯ ಮಾರುಕಟ್ಟೆ ಬಳಿ ದ್ವಿಚಕ್ರ ವಾಹನದಲ್ಲಿ ಬಿ.ಎಚ್ ರಸ್ತೆಯಲ್ಲಿ ಸುತ್ತಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಜಾಲತಾಣದಲ್ಲಿ ಹರಿದಾಡಿದೆ.
‘ಈ ಘಟನೆ ರಾಷ್ಟ್ರೀಯ ಏಕತೆಗೆ ಧಕ್ಕೆಯನ್ನುಂಟು ಮಾಡಿದ್ದು, ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಆರೋಪಿಸಿರುವ ಹಿಂದೂಪರ ಸಂಘಟನೆಗಳ ಮುಖಂಡರು, ತಕ್ಷಣ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
ಇದೇ ದಿನ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಘಟನೆ ಸಹ ನಡೆದಿರುವುದು ಬೆಳಕಿಗೆ ಬಂದು ಹೋರಾಟಗಳು ನಡೆದಿದ್ದವು. ಈ ಸಂಬಂಧ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದ್ದು, ಈ ನಡುವೆ ಇದೀಗ ಈ ಘಟನೆ ಬೆಳಕಿಗೆ ಬಂದಿರುವುದು ನಗರದಲ್ಲಿ ವಾತಾವರಣ ಮತ್ತಷ್ಟು ಅಶಾಂತಿಗೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.