ಶಿವಮೊಗ್ಗ: ‘ನನ್ನ ಕೊನೆ ಉಸಿರು ಇರುವವರಿಗೂ ಪಕ್ಷ ಸಂಘಟನೆ ಮಾಡುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದ ಶುಭ ಮಂಗಳ ಕಲ್ಯಾಣ ಮಂದಿರದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ‘ದೀಪದಿಂದ ಕಮಲದವರೆಗೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ಜೊತೆಗೆ ಮತ್ತಷ್ಟು ಬೆಳೆಸಬೇಕಿದೆ. ಹೀಗಾಗಿ ನಾನು ಬದುಕಿರುವವರಿಗೂ ಪಕ್ಷದ ಸಂಘಟನೆಗಾಗಿ ದುಡಿಯುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ’ ಎಂದು ಭರವಸೆ ನೀಡಿದರು.
ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ‘ಬಿಜೆಪಿ ಪಕ್ಷಕ್ಕೆ ಡಿ.ಎಚ್. ಶಂಕರಮೂರ್ತಿ ದೀಪ ಆದರೆ, ಯಡಿಯೂರಪ್ಪ ಅವರು ಕಮಲ ಇದ್ದಂತೆ. ದೀನದಯಾಳ್ ಅವರ ಆಶಯದಂತೆ ಇಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ. ಮುಂದೆ ಕಾಶಿಯಲ್ಲಿ ವಿಶ್ವನಾಥ ದೇವಾಲಯ ಆಗಲಿದೆ. ಜೊತೆಗೆ ಗೋಹತ್ಯೆ ಸಹ ನಿಲ್ಲಲಿದೆ’ ಎಂದರು.
ಕಾರ್ಯಕ್ರಮದಲ್ಲಿ ‘ಉತ್ತಮ ಶಾಸಕ’ ಪ್ರಶಸ್ತಿ ಪಡೆದ ಯಡಿಯೂರಪ್ಪ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ನಗರಾಧ್ಯಕ್ಷ ಜಗದೀಶ್ ಸೇರಿ ಪಕ್ಷದ ಮುಖಂಡರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.