ಸಾಗರ: ನಗರವನ್ನು ವ್ಯವಸ್ಥಿತವಾಗಿ ರೂಪಿಸುವ ಸಂಬಂಧ ಯೋಜನಾ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.
ಇಲ್ಲಿನ ನಗರಸಭೆಯಲ್ಲಿ ಆರಂಭಗೊಂಡಿರುವ ಯೋಜನಾ ಪ್ರಾಧಿಕಾರದ ಕಚೇರಿಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ನೂತನ ಪ್ರಾಧಿಕಾರದಿಂದಾಗಿ ನಗರವನ್ನು ಶಿಸ್ತುಬದ್ಧವಾಗಿ ಕಟ್ಟುವ ಉದ್ದೇಶ ಈಡೇರಲಿದೆ.ಇಲ್ಲಿನ ನಗರಸಭೆಗೆ ವಾರ್ಷಿಕ ₹ 4 ಕೋಟಿಗೂ ಹೆಚ್ಚಿನ ಆದಾಯವಿದೆ. ಈ ಆದಾಯವನ್ನು ಸರಿಯಾದ ರೀತಿಯಲ್ಲಿ ಬಳಸಿ ಖರ್ಚುಗಳನ್ನು ನಿಭಾಯಿಸಿಕೊಂಡು ನಗರವನ್ನು ಪ್ರಗತಿಪಥದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಯೋಜನಾ ಪ್ರಾಧಿಕಾರದ ಅಗತ್ಯತೆಯ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸರ್ಕಾರದಿಂದ ಸ್ಪಂದನೆ ದೊರಕಿದೆ ಎಂದು ಅವರು ತಿಳಿಸಿದರು.
ನಗರದ ಮಾರ್ಕೆಟ್ ರಸ್ತೆ, ಬಿಎಚ್ ರಸ್ತೆ ವಿಸ್ತರಣೆ ಕಾಮಗಾರಿ ಚಾಲ್ತಿಯಲ್ಲಿದ್ದು, ಸಾಗರವನ್ನು ಮಾದರಿ ನಗರವನ್ನಾಗಿ ರೂಪಿಸಲಾಗುವುದು ಎಂದರು.
ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸದಸ್ಯರಾದ ಟಿ.ಡಿ. ಮೇಘರಾಜ್, ಕೆ.ಆರ್. ಗಣೇಶ್ ಪ್ರಸಾದ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗರಾಜ್ ಪೈ, ಸದಸ್ಯರಾದ ವಿನಾಯಕ ರಾವ್, ಕುಮಾರ್, ಕೆರಿಯಪ್ಪ, ಆರ್. ಶ್ರೀನಿವಾಸ್, ಪೌರಾಯುಕ್ತ ಎಚ್.ಕೆ. ನಾಗಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.