ಶಿವಮೊಗ್ಗ:ನವುಲೆಯಲ್ಲಿ ಪಾಲಿಕೆಯ ಪೌರಕಾರ್ಮಿಕರಿಗಾಗಿ ನಿರ್ಮಿಸಲಾಗುತ್ತಿರುವ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಗುತ್ತಿಗೆದಾರರು ಹಾಗೂ ಎಂಜಿನಿಯರ್ ವಿರುದ್ಧ ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಗರಂ ಆದರು.
ನವುಲೆಯ ಇಂದಿರಾಗಾಂಧಿ ಬಡಾವಣೆಯ ಹಿಂಭಾಗದಲ್ಲಿ ಪೌರಕಾರ್ಮಿಕರಿಗಾಗಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿಯನ್ನು ಶುಕ್ರವಾರ ಪರಿಶೀಲನೆ ನಡೆಸಿದರು.
₹ 10.7 ಲಕ್ಷ ವೆಚ್ಚದಲ್ಲಿ ಪ್ರತಿಮನೆಗಳನ್ನು ನಿರ್ಮಿಸಲಾಗುತ್ತಿದೆ. ಆದರೆ, ಮನೆಯ ಪಿಲ್ಲರ್ ಬಾಕ್ಸ್ಗಳು ಸರಿಯಾಗಿ ನಿರ್ಮಿಸಿಲ್ಲ. ಒಂದು ಪಿಲ್ಲರ್ ಮುಂದಿದ್ದು, ಇನ್ನೊಂದು ಹಿಂದಿದೆ. ಪಿಲ್ಲರ್ಗೆ ಹಾಕಿದ ಸಿಮೆಂಟ್ ಕಿತ್ತುಕೊಂಡು ಬರುತ್ತಿದೆ ಎಂದು ಗುತ್ತಿಗೆದಾರರು ಮತ್ತು ಎಂಜಿನಿಯರ್ ವಿರುದ್ಧ ಕಿಡಿ ಕಾರಿದ ಅವರು, ಕೂಡಲೇ ದೋಷ ಸರಿಪಡಿಸಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಪಾಲಿಕೆಯ ಪೌರಕಾರ್ಮಿಕರಿಗಾಗಿ ಮನೆಗಳನ್ನು ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. 168 ಮನೆ ನಿರ್ಮಾಣದ ಗುರಿಹೊಂದಿದ್ದು, ಗೃಹಭಾಗ್ಯದ ಯೋಜನೆಯಡಿ ಮನೆ ಹಂಚಲಾಗುತ್ತಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಪಾಲಿಕೆಯ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ತಲಾ ಮನೆಯೊಂದನ್ನು 6 ಚದರ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಸದಸ್ಯೆ ಅನಿತಾ ರವಿಶಂಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.