ಶಿವಮೊಗ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು. ಉನ್ನತ ಶಿಕ್ಷಣಕ್ಕೆ ನೀಡಿದ ಶೈಕ್ಷಣಿಕ ಸಾಲ ಹಾಗೂ ಬಡ್ಡಿ ಮನ್ನಾ ಮಾಡಬೇಕು. ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ ಹೇಳಿದರು.
ಅತಿಥಿ ಉಪನ್ಯಾಸಕರು ಸುಮಾರು 20 ವರ್ಷಗಳಿಂದ ಕನಿಷ್ಠ ಗೌರವಧನದ ಪಡೆದು ಕೆಲಸ ಮಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರಿಗೆ ನೆರವಿಗೆ ನಿಲ್ಲುವುದು ಸರ್ಕಾರದ ಕರ್ತವ್ಯ. ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವ ಸಲುವಾಗಿಯೇ ಅಧ್ಯಯನ ಸಮಿತಿ ರಚಿಸಬೇಕು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರು ಹೊಸಬರಿಗಿಂತ ಹೆಚ್ಚಿನ ಅನುಭವ ಹೊಂದಿದ್ದಾರೆ. ಈಗಾಗಲೇ ವಯೋಮಿತಿ ಮೀರುತ್ತಿದೆ. 10 ತಿಂಗಳ ಗೌರವಧನದಲ್ಲಿ ಮೂರು ತಿಂಗಳು ನೀಡಲಾಗಿದೆ. ಕೂಡಲೇ ಬಾಕಿ ಗೌರವಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಉನ್ನತ ಶಿಕ್ಷಣಕ್ಕಾಗಿ ರೈತರು, ಮಧ್ಯಮ ವರ್ಗ, ಬಡವರ ಮಕ್ಕಳು ಸಾಲ ಪಡೆದಿದ್ದಾರೆ. ಕೊರೊನಾ ಸಮಯದಲ್ಲಿ ದುಡಿಮೆ ಇಲ್ಲದೆ ಸಂಕಷ್ಟ ಅನುಭವಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಾರೆ. ಹಣ ಕಟ್ಟಲು ಕಷ್ಟವಾಗುತ್ತಿದೆ. ಹಾಗಾಗಿ, ಉನ್ನತ ಶಿಕ್ಷಣಕ್ಕೆ ಬ್ಯಾಂಕ್ಗಳು ನಿಡಿರುವ ಶೈಕ್ಷಣಿಕ ಸಾಲ ಹಾಗೂ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದರು.
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು. ಶ್ರೀನಿವಾಸಾಚಾರಿ ಸಮಿತಿ ನೀಡಿರುವ ವರದಿ ಅನುಷ್ಠಾನಗೊಳಿಸಬೇಕು. ಗುತ್ತಿಗೆ ಪದ್ಧತಿ ರದ್ದುಮಾಡಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.