
ಶಿವಮೊಗ್ಗ: ಮಕ್ಕಳ ಭಿಕ್ಷಾಟನೆ ತಪ್ಪಿಸದಿದ್ದಲ್ಲಿ ಇದೊಂದು ಗಂಭೀರ ಸಾಮಾಜಿಕ ಪಿಡುಗಾಗಿ ಪರಿಣಮಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆತಂಕ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಮಕ್ಕಳ ಭಿಕ್ಷಾಟನೆ ತಡೆ’ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಮಕ್ಕಳ ಭಿಕ್ಷಾಟಣೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ದುರ್ಬಲ ಮಕ್ಕಳು ಅಥವಾ ಕಳ್ಳ ಸಾಗಾಣಿಕೆ ಮಾಡಿ ತಂದ ಮಕ್ಕಳನ್ನು ಭಿಕ್ಷಾಟನೆಗೆ ಒಳಪಡಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ನೀವು ಅನುಕಂಪದಿಂದ ನೀಡುವ ಭಿಕ್ಷೆ ಮಗು ಪಾಲಾಗುವುದಿಲ್ಲ. ಬದಲಾಗಿ ಮಕ್ಕಳು ಜೀವನಪೂರ್ತಿ ಭಿಕ್ಷುಕರಾಗಿ ಉಳಿಯುವ ಸಂಭವವೇ ಹೆಚ್ಚಾ
ಗಿರುತ್ತದೆ’ ಎಂದರು.
‘ಮಕ್ಕಳೇ ದೇಶದ ಭವಿಷ್ಯ. ದುರ್ಬಲ ವರ್ಗದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬಾಲ ಭಿಕ್ಷಾಟಣೆ ಕುರಿತು ಯಾವುದಾದರೂ ಕರೆ, ಮಾಹಿತಿ ಬಂದಾಗ ಸಂಬಂಧಿಸಿದ ಅಧಿಕಾರಿಗಳು ತಡ ಮಾಡದೇ ಕಾರ್ಯೋನ್ಮುಖರಾಗಬೇಕು’ ಎಂದುಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್ ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಬಿ.ಎಂ. ಮಾತನಾಡಿದರು.
ಬಾಲ ಭಿಕ್ಷಾಟನೆ ತಡೆ ಕುರಿತ ಕರಪತ್ರ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಗಾಯತ್ರಿ ಡಿ.ಎಸ್. ಮಕ್ಕಳ ಭಿಕ್ಷಾಟನೆ ತಡೆ ಕುರಿತು ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಕೆ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್, ಆರ್ಸಿಎಚ್ಒ ಡಾ.ನಾಗರಾಜ್ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.