ಶಿಕಾರಿಪುರ:ಜಿಲ್ಲೆಯ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಏಕಲವ್ಯ ಜುಡೋ ಕ್ಲಬ್ ಆಯೋಜಿಸಿದ್ದ ವಿಶ್ವ ಜುಡೋ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಪೂರಕ. ಮಕ್ಕಳು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಸದೃಢರಾಗಬೇಕು. ಶಿವಮೊಗ್ಗ ನಗರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಕ್ರೀಡಾಂಗಣಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಸಾವಿರಾರು ಕೋಟಿ ಅನುದಾನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ತರಲಾಗಿದೆ ಎಂದರು.
ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಆರಂಭಿಸಲು ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ.ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರದಿಂದ ತಾಲ್ಲೂಕಿಗೆ ನೀರಾವರಿ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ ಎಂದರು.
ಪುಷ್ಪಾ ವಿದ್ಯಾಸಂಸ್ಥೆ ಫಾದರ್ ಸಂತೋಷ್ ಡಿ. ಅಲ್ಮೇಡಾ, ರಾಷ್ಟ್ರೀಯ ಜುಡೋ ಮಹಿಳಾ ತಂಡದ ತರಬೇತುದಾರ ತ್ರಿವೇಣಿ ಜಿತೇಂದ್ರಸಿಂಗ್, ಬಾಕ್ಸಿಂಗ್ ಚಿನ್ನದ ಪದಕ ವಿಜೇತ ಬೆಂಜಮಿನ್ ಫ್ರಾನ್ಸಿಸ್ ಸಿದ್ಧಿ, ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ಸ್ ಅಧ್ಯಕ್ಷ ಚಂದ್ರಕಾಂತ್ ಜಿ. ಭಟ್,ಏಕಲವ್ಯ ಜುಡೋ ಕ್ಲಬ್ ಅಧ್ಯಕ್ಷ ಗಿರೀಶ್ ಧಾರಾವಾಡ, ಉಪಾಧ್ಯಕ್ಷ ಎನ್.ವಿ. ಈರೇಶ್, ಕಾರ್ಯದರ್ಶಿ ಡಿ.ಬಿ. ಮಿಥುನ್, ಪದಾಧಿಕಾರಿಗಳುಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.