ADVERTISEMENT

ಬೀದಿ ಬದಿ ವ್ಯಾಪಾರಿಗಳಿಗೆ ಮಳಿಗೆ ಹಂಚಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 5:57 IST
Last Updated 10 ನವೆಂಬರ್ 2021, 5:57 IST
ಶಿವಮೊಗ್ಗದ ವಿನೋಬನಗರದ ಶಿವಾಲಯದ ಪಕ್ಕದಲ್ಲಿ ನಿರ್ಮಿಸಿರುವ ಮಳಿಗೆಗಳನ್ನು ಬೀದಿ ಬದಿಯ ವ್ಯಾಪಾರಸ್ಥರಿಗೆ ಹಂಚಿಕೆ ಮಾಡುವಂತೆ ಒತ್ತಾಯಿಸಿ ದಲಿತ ಕ್ರಿಯಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ವಿನೋಬನಗರದ ಶಿವಾಲಯದ ಪಕ್ಕದಲ್ಲಿ ನಿರ್ಮಿಸಿರುವ ಮಳಿಗೆಗಳನ್ನು ಬೀದಿ ಬದಿಯ ವ್ಯಾಪಾರಸ್ಥರಿಗೆ ಹಂಚಿಕೆ ಮಾಡುವಂತೆ ಒತ್ತಾಯಿಸಿ ದಲಿತ ಕ್ರಿಯಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ವಿನೋಬನಗರದ ಶಿವಾಲಯದ ಪಕ್ಕದಲ್ಲಿ ನಿರ್ಮಿಸಿರುವ ಮಳಿಗೆಗಳನ್ನು ಬೀದಿ ಬದಿಯ ವ್ಯಾಪಾರಸ್ಥರಿಗೆ ಹಂಚಿಕೆ ಮಾಡುವಂತೆ ಒತ್ತಾಯಿಸಿ ದಲಿತ ಕ್ರಿಯಾ ಸಮಿತಿ ಕಾರ್ಯಕರ್ತರು ಮಂಗಳವಾರ ಲಕ್ಷ್ಮೀ ಚಿತ್ರಮಂದಿರ ಬಳಿ ರಸ್ತೆ ತಡೆ ನಡೆಸಿ, ಉರುಳು ಸೇವೆ ಮೂಲಕ ಪ್ರತಿಭಟನೆ ನಡೆಸಿದರು.

ಮಳಿಗೆಗಳನ್ನು ಲಕ್ಷ್ಮೀ ಚಿತ್ರಮಂದಿರ ಬಳಿಯ ಫುಟ್‌ಪಾತ್ ವ್ಯಾಪಾರಿಗಳಿಗೆ ಹಂಚಿಕೆ ಮಾಡುವುದಾಗಿ ಪಾಲಿಕೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತದವರು ಭರವಸೆನೀಡಿದ್ದರು. ಕಳೆದ 15 ವರ್ಷಗಳಿಂದ ಆ ಜಾಗದಲ್ಲಿ ವ್ಯಾಪಾರ ಮಾಡುತ್ತಿರುವವರನ್ನು ಗುರುತಿಸಿ ಪಟ್ಟಿ ಮಾಡಿ ಅಧಿಕೃತವಾಗಿ ವಿತರಣೆ ಕೂಡ ಮಾಡಲಾಗಿತ್ತು. ಆದರೆ,ಮಳಿಗೆ ಹಂಚಿಕೆಯಲ್ಲಿ ಲೋಪವಾದ ಕಾರಣ ತಡೆಹಿಡಿಯಲಾಗಿತ್ತು. ಈಗ ಮತ್ತೆ ಸ್ಮಾರ್ಟ್‌ ಸಿಟಿ ಕಾಮಗಾರಿ ಅಂಗವಾಗಿ ಬೀದಿ ಬದಿ ವ್ಯಾಪಾರಸ್ಥರನ್ನು ಎತ್ತಂಗಡಿ ಮಾಡುತ್ತಿದ್ದು, ಅವರ ಬದುಕು ಮೂರಾಬಟ್ಟೆಯಾಗಿದೆ. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬರಬೇಕು. ಮಳಿಗೆಗಳನ್ನು ಅರ್ಹರಿಗೆ ವಿತರಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪಾಲಿಕೆ ಅಧಿಕಾರಿಗಳು ವ್ಯಾಪಾರಿಗಳಿಗೆ ಮಳಿಗೆ ನೀಡುವುದಾಗಿ ಮಾತು ಕೊಟ್ಟಿದ್ದರು. ಆದರೆ, ಕಾರ್ಯಗತಗೊಳಿಸಲು ಪಾಲಿಕೆ ಆಡಳಿತ ವಿಫಲವಾಗಿದೆ ಎಂದುಆರೋಪಿಸಿದರು.

ADVERTISEMENT

ದಿಢೀರ್ ರಸ್ತೆ ತಡೆಯಿಂದ ಟ್ರಾಫಿಕ್ ಜಾಮ್ ಉಂಟಾಯಿತು. ರಸ್ತೆ ತಡೆ ಮಾಡದಂತೆ ಪೊಲೀಸರು ಪ್ರತಿಭಟನಕಾರರಿಗೆ ಎಚ್ಚರಿಕೆ ನೀಡಿದರೂ ಅದನ್ನು ಲೆಕ್ಕಿಸದೆ ರಸ್ತೆ ತಡೆ ನಡೆಸಿದ್ದರಿಂದ 15 ನಿಮಿಷಗಳ ಕಾಲ ವಾಹನಗಳ ಸಂಚಾರಕ್ಕೆಅಡಚಣೆ ಉಂಟಾಗಿತ್ತು. ಸಿಪಿಐ ರವಿಕುಮಾರ್ ಮಧ್ಯ ಪ್ರವೇಶಿಸಿ ಪ್ರತಿಭಟನಕಾರರ ಮನವೊಲಿಸಿದ್ದರಿಂದ ರಸ್ತೆತಡೆ ಸ್ಥಗಿತಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರತಿಭಟನೆಯಲ್ಲಿ ಸಮಿತಿ ಅಧ್ಯಕ್ಷ ವಿ. ಭಗವಾನ್, ಶಮಿ, ಮದನ್, ಚಂದ್ರು, ಮಂಜುನಾಥ್, ಯಶೋದಾ, ಚಂದ್ರಮ್ಮ, ಲತಾ, ರತ್ನಮ್ಮ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.