ಶಿವಮೊಗ್ಗ: ಹಾಸ್ಟೆಲ್ ಸ್ಥಳಾಂತರ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಲವಂತವಾಗಿ ಚದುರಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾನಗರದಲ್ಲಿ ನಡೆಯುತ್ತಿತ್ತು. ತುಂಗಾ ಪ್ರವಾಹದಿಂದ ಹಾಸ್ಟೆಲ್ ಕಟ್ಟಡಕ್ಕೆ ನೀರು ನುಗ್ಗಿದ್ದ ಪರಿಣಾಮ ಅಲ್ಲಿನ ವಿದ್ಯಾರ್ಥಿಗಳನ್ನು ನವುಲೆಯ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಈಗ ಸಹಜ ಸ್ಥಿತಿಗೆ ಮರಳಿದರೂ ಅಲ್ಲಿಗೆ ವಾಪಸ್ ಕರೆಸಿಲ್ಲ. ಸಹ್ಯಾದ್ರಿಕಾಲೇಜು ಸೇರಿದಂತೆ ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗಕ್ಕೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.
ವಿದ್ಯಾನಗರದಲ್ಲಿ ನಡೆಯುತ್ತಿದ್ದ ಹಾಸ್ಟೆಲ್ ಸ್ಥಳಾಂತರದ ನಂತರ ಅಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಲಾಗಿದೆ. ವಿದ್ಯಾನಗರದಲ್ಲಿ ಹಾಸ್ಟೆಲ್ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿತ್ತು. ದಿಢೀರ್ ಸ್ಥಳಾಂತರಿಮದ ತೊಂದರೆಯಾಗಿದೆ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಸಾಮಗ್ರಿ ಸಮೇತ ಜಿಲ್ಲಾಧಿಕಾರಿ ಕಚೇರಿಗೆ ಮುಂದೆ ಪ್ರತಿಭಟನೆಗೆ ಇಳಿದರು. ಸವಳಂಗ ರಸ್ತೆಯ ಮಾರ್ಗದಲ್ಲಿ ಕೆಲ ಸಮಯ ಸಂಚಾರ ಅಸ್ತವ್ಯಸ್ತವಾಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರೂ ಕೇಳಲಿಲ್ಲ. ಪೊಲೀಸರು ವಿದ್ಯಾರ್ಥಿಗಳನ್ನು ಬಲವಂತವಾಗಿ ತೆರವುಗೊಳಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.