ADVERTISEMENT

ಹುಂಚಾ ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2019, 13:28 IST
Last Updated 4 ಅಕ್ಟೋಬರ್ 2019, 13:28 IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಹುಂಚಾ ಸುತ್ತಲ ಗ್ರಾಮಸ್ಥರು ಕಲ್ಲು ಗಣಿಗಾರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಹುಂಚಾ ಸುತ್ತಲ ಗ್ರಾಮಸ್ಥರು ಕಲ್ಲು ಗಣಿಗಾರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲು ಹೊಸನಗರ ತಾಲ್ಲೂಕು ರಾಮಭೂಮಿ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಹುಂಚಾ ಸುತ್ತಮುತ್ತಲ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹುಂಚಾ ಗ್ರಾಮದ ಸ.ನಂ. 69ರಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಶ್ರೀಮಂತರು, ಭ್ರಷ್ಟ ಅಧಿಕಾರಿಗಳು ಸೇರಿ ಅರಣ್ಯ ನಾಶ ಮಾಡುತ್ತಿದ್ದಾರೆ. ಅಂತರ್ಜಲ ಬತ್ತಿದೆ. ಗಣಿಗಾರಿಕೆಗೆ ಸ್ಫೋಟಕ ಬಳಸುತ್ತಿರುವ ಪರಿಣಾಮ ಜನ, ಜಾನುವಾರುಗಳು ಭಯಭೀತರಾಗಿದ್ದಾರೆ ಎಂದು ಅಳಲು ತೋಡಿಕೊಂಡರು.

ಕಂದಾಯ ಅಧಿಕಾರಿಗಳು ದಾಖಲೆಗಳನ್ನು ತಿದ್ದುತ್ತಾ ಗಣಿಗಾರಿಕೆ ನಡೆಸುತ್ತಿರುವವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಖಾಸಗಿಪ್ರಭಾವಿಗಳ ಒತ್ತಡಕ್ಕೆ ಮಣಿದು ಮೀಸಲಿಟ್ಟ ಜಾಗ ಬಿಟ್ಟುಕೊಟ್ಟಿದ್ದಾರೆ ಎಂದು ದೂರಿದರು.

ADVERTISEMENT

ಗಣಿಗಾರಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಭೂಗಳ್ಳರಿಗೆ ಮಂಜೂರು ಮಾಡಿರುವ ಜಾಗ ಹಿಂಪಡೆಯಬೇಕು. ಸ್ಫೋಟಕ ಬಳಸಲು ಪರವಾನಗಿ ನೀಡಬಾರದು ಎಂದು ಆಗ್ರಹಿಸಿದರು.

ಸಮಿತಿಯ ಸಂಚಾಲಕ ವೈ.ಸತೀಶ್ ಕುಮಾರ್, ಭಾನುಪ್ರಕಾಶ್, ರವೀಂದ್ರ, ಪರಶುರಾಮ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.