ADVERTISEMENT

ಪಶುವೈದ್ಯೆ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ತಪ್ಪಿತಸ್ಥರನ್ನು ಗಲ್ಲಿಗೇರಿಸಲು ವಿವಿಧ ಸಂಘಟನೆಗಳ ಒಕ್ಕೊರಲ ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 10:15 IST
Last Updated 3 ಡಿಸೆಂಬರ್ 2019, 10:15 IST
ಹೈದರಾಬಾದ್‌ನಲ್ಲಿ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಘಟನೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶಿವಮೊಗ್ಗದಲ್ಲಿ ಸೋಮವಾರ ಎನ್ಎಸ್‌ಯುಐ, ಗಂಧದಗುಡಿ ಫೌಂಡೇಶನ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು (ಎಡಚಿತ್ರ) ಹೈದರಾಬಾದ್‍ನಲ್ಲಿ ಪಶುವೈದ್ಯೆ ಡಾ. ಪ್ರಿಯಾಂಕ ರೆಡ್ಡಿ ಅವರನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಸಾಗರದಲ್ಲಿ ಕ್ರಿಯಾಶೀಲ ಮಹಿಳಾ ಮಂಡಳಿಗಳ ಒಕ್ಕೂಟದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.
ಹೈದರಾಬಾದ್‌ನಲ್ಲಿ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಘಟನೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶಿವಮೊಗ್ಗದಲ್ಲಿ ಸೋಮವಾರ ಎನ್ಎಸ್‌ಯುಐ, ಗಂಧದಗುಡಿ ಫೌಂಡೇಶನ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು (ಎಡಚಿತ್ರ) ಹೈದರಾಬಾದ್‍ನಲ್ಲಿ ಪಶುವೈದ್ಯೆ ಡಾ. ಪ್ರಿಯಾಂಕ ರೆಡ್ಡಿ ಅವರನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಸಾಗರದಲ್ಲಿ ಕ್ರಿಯಾಶೀಲ ಮಹಿಳಾ ಮಂಡಳಿಗಳ ಒಕ್ಕೂಟದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಹೈದರಾಬಾದ್‌ ನಲ್ಲಿಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರಎಸಗಿ, ಕೊಲೆ ಮಾಡಿದ ಘಟನೆ ಖಂಡಿಸಿ ಎನ್ಎಸ್‌ಯುಐ, ಗಂಧದಗುಡಿ ಫೌಂಡೇಶನ್ ಕಾರ್ಯಕರ್ತರು ಸೋಮವಾರಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ರಾಜಸ್ಥಾನದ ಜೈಪುರದ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೇ ನಡೆಯುತ್ತಿವೆ.ಮಹಿಳಾ ಸುರಕ್ಷತೆ ಇಲ್ಲವಾಗಿದೆ. ಇಂತಹ ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು.

‘ತೆಲಂಗಾಣಸರ್ಕಾರ ಇಂತಹನೀಚ ಕೃತ್ಯ ತಡೆಯುವಲ್ಲಿ ವಿಫಲವಾಗಿದೆ. ಮಹಿಳೆಯರಲ್ಲಿ ಅಸುರಕ್ಷತಾಭಾವ ಕಾಡುತ್ತಿದೆ.ಕಠಿಣನಿಯಮಗಳನ್ನು ಜಾರಿಗೆ ತರಬೇಕು. ವಿಶೇಷ ನ್ಯಾಯಾಲಯ ರಚಿಸಬೇಕು. ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕು.ಮಹಿಳಾ ಭದ್ರತೆಗೆವಿಶೇಷ ಮಹಿಳಾ ತಂಡ ರಚಿಸಬೇಕು. ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಎನ್ಎಸ್‌ಐರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಬಾಲಾಜಿ, ಟಿ.ವಿ.ವಿನಯ್, ವಿಜಯ್, ಆರ್.ರಘು, ಅರ್ಜುನ್‌,ಆಕಾಶ್‌, ಗಂಧದ ಗುಡಿ ಫೌಂಡೇಶನ್ಅಧ್ಯಕ್ಷ ವೇಣುಗೋಪಾಲ್, ಉಪಾಧ್ಯಕ್ಷ ಕುಶಾಲ್, ಕಾರ್ಯದರ್ಶಿ ಆರ್.ಹೇಮಂತ್, ಬಿ.ವಿ.ಭರತ್, ಪ್ರಹ್ಲಾದ್, ಮಾರುತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಸಾಗರದಲ್ಲಿಯೂ ಪ್ರತಿಭಟನೆ

ಸಾಗರ: ಈಚೆಗೆ ಹೈದರಬಾದ್‍ನಲ್ಲಿ ಪಶುವೈದ್ಯೆ ಡಾ. ಪ್ರಿಯಾಂಕ ರೆಡ್ಡಿ ಅವರ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆರೋಪಿಗಳಿಗೆ ತಕ್ಷಣ ಮರಣದಂಡನೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸೋಮವಾರ ಕ್ರಿಯಾಶೀಲ ಮಹಿಳಾ ಮಂಡಳಿಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಗರ ಟೌನ್ ಮಹಿಳಾ ಸಮಾಜದ ಅಧ್ಯಕ್ಷೆ ಶೋಭಾ ಲಂಬೋದರ್, ‘‌ಪ್ರಕರಣದಲ್ಲಿ ಈಗಾಗಲೇ ಆರೋಪಿಗಳನ್ನು ಬಂಧಿಸ ಲಾಗಿದ್ದು, ತಪ್ಪಿತಸ್ಥರಿಗೆ ಸಮಯಾವಕಾಶ ನೀಡದಂತೆ ಮರಣ ದಂಡನೆ ವಿಧಿಸಬೇಕು’ ಎಂದು ಒತ್ತಾಯಿಸಿದರು.

ಈಚಿನ ವರ್ಷಗಳಲ್ಲಿ ಮಹಿಳೆಯರ ಮೇಲೆ ದಿನದಿಂದ ದಿನಕ್ಕೆ ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಮಹಿಳೆಯರು ಒಬ್ಬಂಟಿಯಾಗಿ ತಿರುಗಲು ಸಾಧ್ಯವೇ ಇಲ್ಲ ಎನ್ನುವ ವಾತಾವರಣ ನಿರ್ಮಾಣವಾಗುತ್ತಿದೆ. ಸರ್ಕಾರ ಮಹಿಳೆಯರ ರಕ್ಷಣೆಗೆ ಅತ್ಯಂತ ಕಠಿಣ ಕಾನೂನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ಸ್ನೇಹಸಾಗರ ಸ್ವಸಹಾಯ ಮಂಡಳಿ ಅಧ್ಯಕ್ಷೆ ಚೂಡಾಮಣಿ ರಾಮಚಂದ್ರ ಮಾತನಾಡಿ, ‘ಆರೋಪಿಗಳನ್ನು ಗಲ್ಲಿಗೆ ಏರಿಸುವ ಮೂಲಕ ಮುಂದೆ ಇಂತಹ ಕುಕೃತ್ಯದಲ್ಲಿ ಇತರರು ತೊಡಗದಂತೆ ಸರ್ಕಾರ ಎಚ್ಚರಿಕೆ ನೀಡಬೇಕು. ವಕೀಲರು ವಕಾಲತ್ತು ವಹಿಸಬಾರದು’ ಎಂದು ವಿನಂತಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳಾಪರವಾಗಿ ಗಟ್ಟಿಯಾದ ಕಾನೂನು ಜಾರಿಗೆ ತರುವ ಅಗತ್ಯವಿದೆ.

ದೇಶದಲ್ಲಿ ಇಂತಹ ಕೃತ್ಯ ನಡೆದಾಗ ಆರೋಪಿಗಳನ್ನು ವಿಚಾರಣೆ ನೆಪದಲ್ಲಿ ಹೆಚ್ಚುದಿನ ಜೈಲಿನಲ್ಲಿ ಇರಿಸಿಕೊಳ್ಳದೇ ತಕ್ಷಣ ಅವರಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಅಗ್ರಹಿಸಿದರು. ಗೀತಾ ದಳವಾಯಿ, ಡಿ.ಕೆ.ಸರೋಜ, ಜಯಲಕ್ಷ್ಮೀ ನಾರಾಯಣಪ್ಪ, ನಿರ್ಮಲಾ, ನಂದಾ ಗೊಜನೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.