ADVERTISEMENT

ಪ್ರವೀಣ್ ಕೊಲೆ; ಕ್ರಮಕ್ಕೆ ಆಗ್ರಹ

ನಗರದಲ್ಲಿ ಬಿಜೆಪಿ ಘಟಕದಿಂದ ಪ್ರತಿಭಟನೆ; ಆಕ್ರೋಶ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 4:58 IST
Last Updated 28 ಜುಲೈ 2022, 4:58 IST
ಶಿವಮೊಗ್ಗದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಮಾತನಾಡಿದರು
ಶಿವಮೊಗ್ಗದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಮಾತನಾಡಿದರು   

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಗೈದ ಆರೋಪಿಗಳ ಕಠಿಣ ಕ್ರಮಕ್ಕೆ ಆಗ್ರಹಿಸಿ ಬುಧವಾರ ನಗರದ ಶಿವಪ್ಪನಾಯಕ ವೃತ್ತದಲ್ಲಿ ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಮತಾಂಧ ಶಕ್ತಿಗಳು ಬರ್ಬರವಾಗಿ ಹತ್ಯೆ ಮಾಡಿವೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಎಸ್.ಎನ್. ಚನ್ನಬಸಪ್ಪ, ಹಿಂದೂ ಸಮಾಜವನ್ನು ರಕ್ಷಣೆ ಮಾಡುವುದೇ ಕಷ್ಟವಾಗುತ್ತಿದೆ. ಹಿಂದೂಗಳ ಹತ್ಯೆ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

ADVERTISEMENT

‘ಎಲ್ಲ ಹಿಂದೂಗಳಿಗೂ ರಕ್ಷಣೆ ಬೇಕೇ ಬೇಕು. ಇಲ್ಲದಿದ್ದರೆ ಅವರೇ ತಮ್ಮ ರಕ್ಷಣೆ ಮಾಡಿಕೊಳ್ಳುವ ಕಾಲ ದೂರವಿಲ್ಲ. ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ನನಗೆ ತುಂಬಾ ನೋವಾಗುತ್ತದೆ’ ಎಂದು ಭಾವುಕರಾಗಿ ಕಣ್ಣೀರಿಟ್ಟರು.

‘ಭಾರತದಲ್ಲಿ ಹಿಂದೂ– ಮುಸ್ಲಿಂ ಎಲ್ಲರಿಗೂ ರಕ್ಷಣೆ ಬೇಕಾಗಿದೆ. ಈಗಿರುವ ವಿಫಲತೆ ಸರಿಪಡಿಸಬೇಕಾಗಿದೆ. ಸರ್ಕಾರ ಮೆಚ್ಚಿಸಲು ಹಿಂದೂ ಸಂಘಟನೆ ಅಸ್ತಿತ್ವಕ್ಕೆ ಬಂದಿಲ್ಲ. ಹಿಂದೂ ಸಂಘಟನೆಯ ಕೆಲವರು ಸರ್ಕಾರದ ಭಾಗವಾಗಿದ್ದಾರೆ ಅಷ್ಟೇ. ಹಿಂದೂಗಳ ರಕ್ಷಣೆ ಮಾಡಬೇಕಾದವರು ಯೋಚನೆ ಮಾಡಬಾರದು. ಸರ್ಕಾರ ಅಗತ್ಯಕ್ರಮ ತೆಗೆದುಕೊಳ್ಳಬೇಕು’ ಎಂದುವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ನಗರ ಬಿಜೆಪಿ ಅಧ್ಯಕ್ಷ ಜಗದೀಶ್ ಎನ್.ಕೆ., ಎಸ್. ದತ್ತಾತ್ರಿ, ಕೆ.ಈ. ಕಾಂತೇಶ್, ರಮೇಶ್(ರಾಮು) ಜಿಲ್ಹಾ ಕಾರ್ಯದರ್ಶಿ ಹೃಷಿಕೇಶ್ ಪೈ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಬಿ. ಹರಿಕೃಷ್ಣ, ಸಂತೋಷ್ ಬಳ್ಳೆಕೆರೆ, ಮೋಹನ್ ರೆಡ್ಡಿ, ಆರ್.ವಿ. ದರ್ಶನ್, ಉಪ ಮೇಯರ್ ಶಂಕರ್ ಗನ್ನಿ ಮೊದಲಾದವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.