ADVERTISEMENT

ಶಿವಮೊಗ್ಗ | ರೈತ, ಕಾರ್ಮಿಕ ವಿರೋಧಿ ನೀತಿಗಳನ್ನು ನಿಲ್ಲಿಸಿ, ಪ್ರತಿಭಟನೆ

ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ 18ಕ್ಕೂ ಹೆಚ್ಚು ಸಂಘಟನೆಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 4:27 IST
Last Updated 10 ಜುಲೈ 2025, 4:27 IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ 18ಕ್ಕೂ ಹೆಚ್ಚು ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಎಚ್.ಆರ್.ಬಸವರಾಜಪ್ಪ ಮಾತನಾಡಿದರು
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ 18ಕ್ಕೂ ಹೆಚ್ಚು ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಎಚ್.ಆರ್.ಬಸವರಾಜಪ್ಪ ಮಾತನಾಡಿದರು   

ಶಿವಮೊಗ್ಗ: ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿಗಳು ಹಾಗೂ ಕಾರ್ಪೊರೇಟ್ ಪರವಾದ ನಿಲುವು ವಿರೋಧಿಸಿ ಬುಧವಾರ ನಗರದಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಸಭೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಅಕ್ಷರ ದಾಸೋಹ, ಅಂಗನವಾಡಿ ನೌಕರರ ಸಂಘ, ರೈತ ಸಂಘ ಮತ್ತು ಹಸಿರುಸೇನೆ, ಸಂಯುಕ್ತ ಕಿಸಾನ್ ಮೋರ್ಚಾ, ಗ್ರಾಮ ಪಂಚಾಯಿತಿ ನೌಕರರ ಸಂಘ, ವಿಮಾ ನೌಕರರ ಸಂಘ, ಅಂಚೆ ನೌಕರರ ಸಂಘ, ಗುತ್ತಿಗೆ ಕಾರ್ಮಿಕರ ಸಂಘ, ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಸೇರಿದಂತೆ 18ಕ್ಕೂ ಅಧಿಕ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದವು.

ಬಿಸಿಯೂಟ ತಯಾರಕರನ್ನು ಕಾಯಂಗೊಳಿಸಬೇಕು. ಕನಿಷ್ಠ ವೇತನ ಕೊಡಬೇಕು. ಸ್ಕೀಂ ಎಂಬ ಪದದ ಹೆಸರಿನಲ್ಲಿ ಶೋಷಣೆ ಸರಿಯಲ್ಲ.  ಬಿಸಿಯೂಟ ತಯಾರಕರನ್ನೂ ಕಾರ್ಮಿಕರೆಂದು ಪರಿಗಣಿಸಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟನಕಾರರು ಮುಂದಿಟ್ಟರು.

ADVERTISEMENT

ಅಂಗನವಾಡಿ ನೌಕರರಿಗೆ ಎಫ್.ಆರ್.ಎಸ್. ಕಡ್ಡಾಯ ಮಾಡಬಾರದು, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾಯಂಗೊಳಿಸಬೇಕು. ಕನಿಷ್ಠ ₹26,000 ವೇತನ ನೀಡಬೇಕು. ₹10,000 ಮಾಸಿಕ ಪಿಂಚಣಿ ಕೊಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ ಆರಂಭಿಸಬೇಕು. ಖಾಲಿ ಹುದ್ದೆಗಳ ಭರ್ತಿ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು. 

ರೈತ ಸಂಘ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಬಿಸಿಯೂಟ ತಯಾರಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಜಿ. ಅಕ್ಕಮ್ಮ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ರಾಘವೇಂದ್ರ, ಟಿ.ಎಂ. ಚಂದ್ರಪ್ಪ, ಭಾಗ್ಯ ರಾಘವೇಂದ್ರ, ಬಂಗಾರಪ್ಪ, ಸರೋಜಮ್ಮ, ಶಾರದಾ, ಆರ್. ಮಂಜುಳಾ, ಜಯಲಕ್ಷ್ಮೀ, ರವಿ ಕುಲಕರ್ಣಿ, ಅಶೋಕ್, ಸುರೇಶ್, ಶೈಲಜಾ, ರಾಜು ಚಿನ್ನಸ್ವಾಮಿ, ಚಂದ್ರಪ್ಪ, ಮಿಥುನ್, ಹನುಮಮ್ಮ, ಕುಮಾರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬೇಡಿಕೆಗಳು...

*ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕು

*ಬಲವಂತದ ಭೂಸ್ವಾಧೀನ ನಿಲ್ಲಿಸಬೇಕು

*ಸಾಗುವಳಿ ಮಾಡುವ ಸಣ್ಣ ರೈತರಿಗೆ ರಕ್ಷಣೆ ಕೊಡಬೇಕು *ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು

*ವಿದ್ಯುತ್ ಕ್ಷೇತ್ರದ ಖಾಸಗೀಕರಣ ಪ್ರಕ್ರಿಯೆ ನಿಲ್ಲಿಸಿ

*ಬಗರ್‌ಹುಕುಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ಭೂಮಿ ಕೊಡಬೇಕು

*ಕಾರ್ಪೊರೇಟ್ ಪರ ಕೃಷಿ ನೀತಿಗಳನ್ನು ಕೈಬಿಡಬೇಕು

ಕಾರ್ಮಿಕ ಕಾಯ್ದೆಗಳ ಜಾರಿ ಬೇಡ..

ಉದ್ದೇಶಿತ ನಾಲ್ಕು ಕಾರ್ಮಿಕ ಕಾಯ್ದೆಗಳ ಜಾರಿ ಬೇಡ. ಅಭಿವೃದ್ಧಿ ಹೆಸರಿನಲ್ಲಿ ಕಾರ್ಮಿಕರನ್ನು ಕಂಪನಿಗಳ ಸೇವಕರನ್ನಾಗಿ ಮಾಡಬಾರದು. ದುಡಿಯುವ ಜನರಿಗೆ ಗೌರವ ನೀಡಬೇಕು. ಕನಿಷ್ಠ ದಿನಗೂಲಿ ₹600 ನೀಡಬೇಕು. ಸಾಮಾಜಿಕ ಭದ್ರತೆ ನೀಡಬೇಕು. ಸರ್ಕಾರದ ಒಡೆತನದಲ್ಲಿರುವ ಸಂಸ್ಥೆಗಳನ್ನು ಮುಚ್ಚಬಾರದು. ದಿನಕ್ಕೆ 8 ಗಂಟೆ ಕೆಲಸ ನೀಡಬೇಕು. ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ಕಾರ್ಮಿಕರಿಗೆ ₹9000 ಪಿಂಚಣಿ ನೀಡಬೇಕು. ಸಾರ್ವಜನಿಕ ಉದ್ದಿಮೆಗಳನ್ನು ರಾಷ್ಟ್ರೀಕರಣ ಮಾಡಬಾರದು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.