ADVERTISEMENT

ವಿದ್ಯುತ್ ಕಾಯ್ದೆ ತಿದ್ದುಪಡಿ ಖಂಡಿಸಿ ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 11:38 IST
Last Updated 10 ಆಗಸ್ಟ್ 2021, 11:38 IST
ಶಿವಮೊಗ್ಗದಲ್ಲಿ ಮಂಗಳವಾರ ನಡೆದ ರೈತರ ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್‌.ಆರ್.ಬಸವರಾಜಪ್ಪ ಮಾತನಾಡಿದರು.
ಶಿವಮೊಗ್ಗದಲ್ಲಿ ಮಂಗಳವಾರ ನಡೆದ ರೈತರ ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್‌.ಆರ್.ಬಸವರಾಜಪ್ಪ ಮಾತನಾಡಿದರು.   

ಶಿವಮೊಗ್ಗ: ವಿದ್ಯುತ್ ಕಾಯ್ದೆ ತಿದ್ದುಪಡಿ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ರೈತರ ವಿರೋಧದ ಮಧ್ಯೆಯೂ ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುತ್ತಿದೆ. ಲೋಕಸಭಾ ಅಧಿವೇಶನಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ. ಈ ಕಾಯ್ದೆ ರೈತರಿಗೆ ಮರಣ ಶಾಸನವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದುಬಾರಿ ವಿದ್ಯುತ್ ಬಿಲ್ ಪಾವತಿಸಿ ಬೆಳೆ ಬೆಳೆದು ಕಡಿಮೆ ಬೆಲೆಗೆ ಬೆಳೆ ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಲಿದೆ. ನಷ್ದ ಪರಿಣಾಮ ರೈತರು ಕೃಷಿಯಿಂದಲೇ ವಿಮುಖರಾಗುವ ಸಾಧ್ಯತೆ ಇದೆ. ಕೃಷಿಗೆ ಉಚಿತ ವಿದ್ಯುತ್ ನೀಡಬೇಕು ಎಂಬ ಬೇಡಿಕೆ ಇದ್ದರೂ ಪರಿಗಣಿಸದೆ ಖಾಸಗೀಕರಣಕ್ಕೆ ಮುಂದಾಗಿರುವುದು ಖಂಡನೀಯ ಎಂದರು.

ADVERTISEMENT

ಕೃಷಿ ಕಾಯಿದೆಗಳನ್ನು ವಿರೋಧಿಸಿ 8 ತಿಂಗಳಿಂದ ರೈತರು ದೆಹಲಿಯ ಹೊರ ಭಾಗದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ಸಹ 18 ತಿಂಗಳವರೆಗೆ ತಿದ್ದುಪಡಿ ಕಾಯಿದೆಗಳನ್ನು ಜಾರಿಗೊಳಿಸಬಾರದು ಎಂದು ಆದೇಶಿಸಿದೆ. ಆದರೂ, ಕೇಂದ್ರ ಸರ್ಕಾರ ವಿದ್ಯುತ್ ತಿದ್ದುಪಡಿ ಮಸೂದೆ ಜಾರಿಗೊಳಿಸಲು ತುದಿಗಾಲಲ್ಲಿ ನಿಂತಿರುವುದು ದುರಾದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕಾಯಿದೆ ಅಡಿ ಉಪ ಗುತ್ತಿಗೆ, ಪ್ರಾಂಚೈಸಿಗಳಿಗೆ ಅವಕಾಶವಿದೆ. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಲಭ್ಯವಾಗುವುದಿಲ್ಲ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಬೀದಿ ದೀಪ, ಸಾರ್ವಜನಿಕ ಕುಡಿಯುವ ನೀರಿನ ಘಟಕಗಳಿಗೂ ಶುಲ್ಕ ನೀಡಬೇಕಾಗುತ್ತದೆ. ವಿದ್ಯುತ್ ಕ್ಷೇತ್ರ ಖಾಸಗೀಕರಣವಾದರೆ ಮುಂಗಡ ಪಾವತಿ ನಿಯಮ ಜಾರಿಯಾಗಲಿದೆ. ಮುಂಚಿತವಾಗಿ ಹಣ ನೀಡಿ ವಿದ್ಯುತ್ ಖರೀದಿಸಬೇಕಾಗುತ್ತದೆ. ಇದು ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ ಎಂದು ದೂರಿದರು.

ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡ ಎಚ್‌.ಟಿ.ಹಾಲೇಶಪ್ಪ,ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಹಿಟ್ಟೂರು ರಾಜು, ವೀರೇಶ್, ಚಂದ್ರಪ್ಪ, ರಾಘವೇಂದ್ರ, ಮಂಜಪ್ಪ, ರಾಮಚಂದ್ರಪ್ಪ, ರುದ್ರೇಶ್, ಎನ್.ರಮೇಶ್, ತಮ್ಮಡಿಹಳ್ಳಿ ಹಾಲೇಶಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.