ಶಿವಮೊಗ್ಗ: ಸ್ಮಾರ್ಟ್ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡ ಕುವೆಂಪು ರಸ್ತೆಯ ಅವೈಜ್ಞಾನಿಕ ಕಾಮಗಾರಿ ಸರಿಪಡಿಸಲು ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ರಸ್ತೆತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರಮುಖ ಸಂಚಾರ ದಟ್ಟಣೆಯ ರಸ್ತೆ ವಿಸ್ತರಣೆ ಮಾಡಬೇಕು. ಅತಿಕ್ರಮಣ ತೆರವುಗೊಳಿಸಬೇಕು. ಖಾತೆದಾರರಿಗೆ ಪರಿಹಾರ ನೀಡಿ ನಂತರ ಅಭಿವೃದ್ಧಿ ಪಡಿಸಬೇಕು ಎಂದು ಹಿಂದೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಹಣ ಕೂಡ ಮಂಜೂರಾಗಿತ್ತು. ಕೆಲವು ತಾಂತ್ರಿಕ ತೊಂದರೆಗಳಿಂದ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗಿತ್ತು. ಈಗ ರಸ್ತೆ ಇರುವಂತೆಯೇ ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಮಾರ್ಟ್ಸಿಟಿ ಯೋಜನೆಯಲ್ಲಿ ಕೆಲವು ವರ್ಷಗಳಿಂದ ಅಭಿವೃದ್ಧಿ ಕಾಮಗಾರಿಗಳು ಕುಂಟುತ್ತಾ ಸಾಗಿವೆ. ಬಾಕ್ಸ್ ಚರಂಡಿಯನ್ನು ನಕ್ಷೆ ಪ್ರಕಾರ ನೇರವಾಗಿ ಮಾಡದೇ ಝಡ್ ಆಕಾರದಲ್ಲಿ ತಿರುವು ಪಡೆದುಕೊಂಡು ಅವೈಜ್ಞಾನಿಕವಾಗಿ ಮಾಡಲಾಗಿದೆ. ನಕ್ಷೆಯ ಪ್ರಕಾರ ಕಾಮಗಾರಿ ನಡೆದಿಲ್ಲ ಎಂದು ದೂರಿದರು.
ಯಾರದೋ ಪ್ರಭಾವಕ್ಕೆ ಒಳಗಾಗಿ ಅವೈಜ್ಞಾನಿಕ ಕಾಮಗಾರಿ ಮಾಡಲಾಗಿದೆ. ಅತಿಕ್ರಮಣ ತೆರವುಗೊಳಿಸಿಲ್ಲ. ಸ್ಥಳಕ್ಕೆ ಆಯುಕ್ತರು ಬಂದು ಸೂಕ್ತವಿವರಣೆ ನೀಡುವವರೆಗೆ ಕದಲುವುದಿಲ್ಲ. ಜನರ ತೆರಿಗೆ ಹಣವನ್ನು ಪೋಲಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ರಸ್ತೆ ಸಂಚಾರ ತಡೆದ ಪರಿಣಾಮ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ದಟ್ಟಣೆ ಉಂಟಾಗಿತ್ತು.
ಮುಖಂಡರಾದ ದೀಪಕ್ ಸಿಂಗ್, ರಘು, ಲಕ್ಷ್ಮಣ್, ಆರೀಫ್, ಶಾಂಸುಂದರ್, ಮುಜೀಬ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.