ಶಿವಮೊಗ್ಗ: ಮಳೆಯಿಂದ ಹಾನಿ ಉಂಟಾದವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಆರ್ಎಂಎಲ್ ನಗರ ನಾಗರಿಕ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕಳೆದ ವಾರ ಸುರಿದ ಧಾರಾಕಾರ ಮಳೆಯಿಂದಾಗಿ ನಗರದಲ್ಲಿ ರಸ್ತೆ, ಚರಂಡಿ ತುಂಬಿ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ಪೀಠೋಪಕರಣ, ಉಡುಪುಗಳು, ದವಸಧಾನ್ಯ ಹಾಗೂ ವಾಹನಗಳು ಸೇರಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ರಾಜಕಾಲುವೆ ಮತ್ತು ರಸ್ತೆ ಕಾಮಗಾರಿ ಸರಿಯಾದ ಸಮಯದಲ್ಲಿ ಪೂರ್ಣ ಆಗದಿರುವುದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ’ ಎಂದು ಪ್ರತಿಭಟನಕಾರರು ದೂರಿದರು.
ಆರ್ಎಂಎಲ್ ನಗರದ ರಾಜಕಾಲುವೆ ಕಾಮಗಾರಿ ಪೂರ್ಣಗೊಳಿಸಿ ಸುಲಭವಾಗಿ ನೀರು ಹರಿಯುವಂತೆ ಮಾಡಬೇಕು. ಉದ್ದ ಮತ್ತು ಅಗಲವನ್ನು ಅಗತ್ಯಕ್ಕೆ ತಕ್ಕಂತೆ ಹೆಚ್ಚಿಸಬೇಕು. ಚಾನಲ್ಗೆ ತಡೆಗೋಡೆ ನಿರ್ಮಿಸಬೇಕು. ವಾರ್ಡ್ನ ಕಾರ್ಪೊರೇಟರ್ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಈ ಅವಾಂತರಕ್ಕೆ ಕಾರಣ. ಆದ್ದರಿಂದ ಜಿಲ್ಲಾಧಿಕಾರಿ ಅವರು ಸ್ಥಳ ಪರಿಶೀಲಿಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಪ್ರಮುಖರಾದ ಅಲ್ತಾಫ್ ಫರ್ವೇಜ್, ಹಫೀಜ್ ಶಫೀವುಲ್ಲಾ, ಸೈಯದ್ ನೂರುಲ್ಲಾ, ಮಾರುತಿ, ಅಲ್ಲಾಭಕ್ಷಿ, ಇಸ್ಮಾಯಿಲ್, ಮುಸ್ತಾಕ್ ಅಹ್ಮದ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.