
ಶಿವಮೊಗ್ಗ: ಮಕ್ಕಳು ದೇಶದ ಸಂಪತ್ತು. ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಸತ್ಪ್ರಜೆಗಳನ್ನಾಗಿ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಇಲ್ಲಿನ ಶರಾವತಿ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಲ್ಲಿನ ಗಾಡಿಕೊಪ್ಪದಲ್ಲಿರುವ ಶರಾವತಿ ಎಜುಕೇಷನ್ ಟ್ರಸ್ಟಿನ ಮಲ್ನಾಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ 46 ಸಾವಿರ ಸರ್ಕಾರಿ ಶಾಲೆ, 16 ಸಾವಿರ ಅನುದಾನಿತ ಶಾಲೆ, 76 ಸಾವಿರ ಅನುದಾನ ರಹಿತ ಶಾಲೆಗಳಿವೆ. ಒಟ್ಟು 1 ಕೋಟಿ 16 ಲಕ್ಷ ಮಕ್ಕಳಿಗೆ ಸೇವೆ ಮಾಡುವ ಅವಕಾಶ ದೊರೆತಿದೆ ಎಂದರು.
ಮಲ್ನಾಡ್ ಶಿಕ್ಷಣ ಸಂಸ್ಥೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಾ ಬಂದಿದೆ. ಪೋಷಕರು ಸಂಸ್ಥೆಯ ಮೇಲೆ ವಿಶ್ವಾಸವಿರಿಸಿ ತಮ್ಮ ಮಕ್ಕಳನ್ನು ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಸೇರಿಸುವ ಮೂಲಕ
ಭವಿಷ್ಯವನ್ನು ರೂಪಿಸುವ ಬಹುದೊಡ್ಡ ಜವಾಬ್ದಾರಿ ನೀಡಿದ್ದೀರಿ ಎಂದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಯಾವತ್ತೂ ಸುಲಭವಾಗಿ ಸಿಗುವಂತಿರಬೇಕು. ಅದಕ್ಕಾಗಿ ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೋಗ ರಿಸರ್ಚ್ ನ ಸಂಸ್ಥಾಪಕ ಅಧ್ಯಕ್ಷ ಡಾ.ಯೋಗಿ ದೇವರಾಜ್, ಶಿವಗಂಗಾ ಯೋಗ ಕೇಂದ್ರದ ರುದ್ರ ಆರಾಧ್ಯ, ಶರಾವತಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲ ಶ್ರೀನಿಧಿ, ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲಲೆ ಬಿ.ನಿಶಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.