ಸಾಗರ: ‘ಸಂಸದ ಬಿ.ವೈ.ರಾಘವೇಂದ್ರ, ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ತುಮರಿ ಸೇತುವೆ ಪಕ್ಕದಲ್ಲೇ ಟೆಂಟ್ ಹಾಕಿ, ಸೇತುವೆ ತಾವೇ ಮಾಡಿಸಿದ್ದು ಎಂದು ಪ್ರಚಾರ ಮಾಡುವುದು ಒಳ್ಳೆಯದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಂಗ್ಯವಾಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೇತುವೆ ಉದ್ಘಾಟನೆಯ ದಿನಾಂಕ ನಿಗದಿ ಮಾಡದೆ ಈ ಭಾಗದ ಜನಪ್ರತಿನಿಧಿಗಳಿಗೆ ಮಾಹಿತಿ ನೀಡದೆ ಕೇವಲ ತಮ್ಮ ಪಕ್ಷದ ಮುಖಂಡರೊಂದಿಗೆ ಮಂಗಳವಾರ ಸೇತುವೆ ಬಳಿ ತೆರಳಿ ತಮ್ಮ ಮನೆಯಿಂದ ಹಣ ತಂದು ಸೇತುವೆ ನಿರ್ಮಿಸಿದ ರೀತಿಯಲ್ಲಿ ಬಡಾಯಿ ಕೊಚ್ಚಿಕೊಳ್ಳುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಸೇತುವೆ ನಿರ್ಮಾಣವಾಗಬೇಕು ಎಂದು ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ಮನವಿ ಸಲ್ಲಿಸಿದ್ದೇ ನಾನು. ತದನಂತರ ಹಲವರ ಹೋರಾಟ ಹಾಗೂ ಪರಿಶ್ರಮದಿಂದ ಸೇತುವೆ ನಿರ್ಮಾಣವಾಗಿದೆ. ಯಡಿಯೂರಪ್ಪ ಅವರಿಗೆ ಸೇತುವೆ ನಿರ್ಮಾಣದ ಶ್ರೇಯ ಸಲ್ಲಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಉಳಿದವರ ಪಾತ್ರ ಏನೂ ಇಲ್ಲ ಎಂದರು.
ಸೇತುವೆ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನಾದರೂ ಕರೆಸಲಿ. ಆದರೆ ಕಾರ್ಯಕ್ರಮದ ಸ್ಥಳ ನಿಗದಿ ಮಾಡುವಾಗ ಕ್ಷೇತ್ರದ ಶಾಸಕರು ಇರಬೇಕು ಎಂಬ ಸೌಜನ್ಯ ಸಂಸದರಿಗೆ ಇಲ್ಲದಿರುವುದು ಬೇಸರದ ಸಂಗತಿ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.