ADVERTISEMENT

ಪರಿಶಿಷ್ಟ ಮಹಿಳೆ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಊರಿನ ಪಕ್ಕದಲ್ಲೇ ಪ್ರಕರಣ

​ಪ್ರಜಾವಾಣಿ ವಾರ್ತೆ
Published 11 ಮೇ 2022, 19:26 IST
Last Updated 11 ಮೇ 2022, 19:26 IST

ತೀರ್ಥಹಳ್ಳಿ: ಪತಿಗೆ ಹೊಡೆದು ಅವರ ಕಣ್ಣೆದುರೇ ಪತ್ನಿಯನ್ನು ಎಳೆದೊಯ್ದು, ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವುದುಆರಗ ಸಮೀಪದ ಗ್ರಾಮದಲ್ಲಿ ಸೋಮವಾರ ರಾತ್ರಿ 10.30ಕ್ಕೆನಡೆದಿದೆ.

ಪ್ರಕರಣದ ಸಂತ್ರಸ್ತರು ಪರಿಶಿಷ್ಟ ಜಾತಿಯವರು. ಇವರುಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಆರೋಗ್ಯ ಸರಿ ಇಲ್ಲದ ಕಾರಣ ದಂಪತಿ ಸೋಮವಾರ ಪಟ್ಟಣದ ವೈದ್ಯರಿಂದ ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದಾಗ ಸಂಪತ್‌, ಆದರ್ಶ್‌ ಹಾಗೂ ಇನ್ನಿಬ್ಬರು ಯುವಕರು ಎರಡು ಬೈಕ್‌ಗಳಲ್ಲಿ ಬಂದು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ADVERTISEMENT

‘ಯುವಕರು ಪತಿಗೆ ಹೊಡೆದು ನನ್ನನ್ನು ಕಾಡಿಗೆ ಎಳೆದೊಯ್ದು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದರು. ಪ್ರಜ್ಞೆ ತಪ್ಪಿ ಬಿದ್ದಿದ್ದ ಪತಿ ಎಚ್ಚರಗೊಂಡು ಜೋರಾಗಿ ಕೂಗಿದರು. ನಾನೂ ಕೂಗಿಕೊಳ್ಳುತ್ತಿದ್ದುದನ್ನು ಕೇಳಿಸಿಕೊಂಡ ಸ್ಥಳೀಯರು ಸ್ಥಳಕ್ಕೆ ಬಂದಾಗ ಯುವಕರು ಪರಾರಿಯಾದರು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ದಂಪತಿಯಿಂದ ಹೇಳಿಕೆ ಪಡೆದಿದ್ದ ಪೊಲೀಸರು ಎರಡು ದಿನಗಳಾದರೂ ಮೊಕದ್ದಮೆ ದಾಖಲಿಸಿರಲಿಲ್ಲ. ಆಸ್ಪತ್ರೆಗೆ ಭೇಟಿ ನೀಡಿ, ಮಾಹಿತಿ ಪಡೆದು ಸ್ಥಳೀಯ ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಿದರೂ ಪ್ರಕರಣ ದಾಖಲಾಗಿರಲಿಲ್ಲ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು. ತಪ್ಪಿತಸ್ಥ ಪೊಲೀಸರ ಮೇಲೆ ಕ್ರಮ ಜರುಗಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.