ADVERTISEMENT

ಸಾಗರಕ್ಕೆ ಜಿಲ್ಲಾ ಕೇಂದ್ರದ ಬೇಡಿಕೆಗೆ ಸಿ.ಎಂ ಸ್ಪಂದನೆ: ತೀ.ನ.ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2026, 5:08 IST
Last Updated 1 ಫೆಬ್ರುವರಿ 2026, 5:08 IST
ಸಾಗರದ ಜಿಲ್ಲಾ ಹೋರಾಟ ಸಮಿತಿ ಪ್ರಮುಖರು ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಸಾಗರದ ಜಿಲ್ಲಾ ಹೋರಾಟ ಸಮಿತಿ ಪ್ರಮುಖರು ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.   

ಸಾಗರ: ಸಾಗರಕ್ಕೆ ಜಿಲ್ಲಾ ಕೇಂದ್ರದ ಮಾನ್ಯತೆ ನೀಡಬೇಕು ಎಂಬ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉತ್ತಮ ಸ್ಪಂದನೆ ದೊರಕಿದೆ ಎಂದು ಸಾಗರ ಜಿಲ್ಲಾ ಹೋರಾಟ ಸಮಿತಿಯ ಪ್ರಮುಖರಾದ ತೀ.ನ.ಶ್ರೀನಿವಾಸ್ ತಿಳಿಸಿದ್ದಾರೆ.

ಶಾಸಕ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಸಮಿತಿಯ ಪ್ರಮುಖರು ಬೆಂಗಳೂರಿಗೆ ನಿಯೋಗ ತೆರಳಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಸಿದ್ದರಾಮಯ್ಯ ಅವರು ನಿಯೋಗದೊಂದಿಗೆ ಮಾತುಕತೆ ನಡೆಸಿ ನಮ್ಮ ಬೇಡಿಕೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಾಗರವು ಕಳೆದ 70 ವರ್ಷಗಳಿಂದಲೂ ಜಿಲ್ಲೆಯಲ್ಲಿ ಉಪವಿಭಾಗೀಯ ಕೇಂದ್ರವಾಗಿದೆ. ಶರಾವತಿ ಜಲ ವಿದ್ಯುತ್ ಯೋಜನೆಗಾಗಿ ತಾಲ್ಲೂಕಿನ ಅನೇಕರು ತಮ್ಮ ಬದುಕನ್ನು ತ್ಯಾಗ ಮಾಡಿದ್ದಾರೆ. ಈಗಲೂ ಜಿಲ್ಲಾ ಕೇಂದ್ರಕ್ಕೆ ಜನರು ತೆರಳಲು 70 ರಿಂದ 100 ಕಿ.ಮೀ. ಕ್ರಮಿಸಬೇಕಿದೆ. ಸಾಗರ ಜಿಲ್ಲಾ ಕೇಂದ್ರವಾದರೆ ಆಡಳಿತ ನಮಗೆ ಹತ್ತಿರವಾಗುತ್ತದೆ ಎಂಬ ವಿಷಯವನ್ನು ಮುಖ್ಯ ಮಂತ್ರಿಗಳಿಗೆ ಮನದಟ್ಟು ಮಾಡಲಾಗಿದೆ ಎಂದರು.

ADVERTISEMENT

ಜಿಲ್ಲಾ ಕೇಂದ್ರದ ಮಾನ್ಯತೆಗೆ ಒತ್ತಾಯಿಸಿ ಕಳೆದ 10 ವರ್ಷಗಳಿಗೂ ಹೆಚ್ಚು ಕಾಲದಿಂದ ತಾಲ್ಲೂಕಿನ ಜನರು ಹೋರಾಟ ಮಾಡುತ್ತಿದ್ದಾರೆ. ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರು ಸ್ಥಾಪನೆ ಮಾಡಬೇಕು ಎಂಬ ಅಲ್ಲಿನ ಜನರ ಬೇಡಿಕೆಗೆ ನಮ್ಮ ಸಮಿತಿಯ ಬೆಂಬಲವಿದೆ. ಸೊರಬ, ಹೊಸನಗರ, ಆನಂದಪುರಂ, ಕಾರ್ಗಲ್-ಜೋಗ್, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಜನರ ಬೆಂಬಲ ಈ ಹೋರಾಟಕ್ಕಿದೆ ಎಂದು ಅವರು ತಿಳಿಸಿದರು.

ಇಲ್ಲಿನ ಮಾರಿಕಾಂಬಾ ಜಾತ್ರೆಯ ನಂತರ ಜಿಲ್ಲಾ ಕೇಂದ್ರದ ಬೇಡಿಕೆಗೆ ಒತ್ತಾಯಿಸಿ ಹೋರಾಟವನ್ನು ಮುಂದುವರೆಸಲಾಗುವುದು. ಸರ್ಕಾರ ಈ ವಿಷಯದಲ್ಲಿ ಸ್ಪಷ್ಟ ನಿಲುವು ತಾಳುವವರೆಗೂ ಹೋರಾಟ ಜಾರಿಯಲ್ಲಿರುತ್ತದೆ ಎಂದು ಹೇಳಿದರು.

ಸಾಗರ ಜಿಲ್ಲಾ ಹೋರಾಟ ಸಮಿತಿಯ ಪ್ರಮುಖರಾದ ಮಹ್ಮದ್ ಖಾಸಿಂ, ಸುಂದರ್ ಸಿಂಗ್, ಕೆ.ವಿ.ಜಯರಾಮ್, ಮಂಜುನಾಥ ಆಚಾರ್, ತಾರಾಮೂರ್ತಿ, ವೆಂಕಟೇಶ್, ರೇವಣಪ್ಪ, ಮನ್ಸೂರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.