ADVERTISEMENT

ಸಾಗರ | ಅರಣ್ಯ ಇಲಾಖೆಯಿಂದ ದೌರ್ಜನ್ಯದ ಆರೋಪ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 3:51 IST
Last Updated 1 ಮಾರ್ಚ್ 2026, 3:51 IST
ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅರಣ್ಯ ಇಲಾಖೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಶುಕ್ರವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು 
ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅರಣ್ಯ ಇಲಾಖೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಶುಕ್ರವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು    

ಸಾಗರ: ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅರಣ್ಯ ಇಲಾಖೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಶುಕ್ರವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಬಡಾವಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಅಗಳ ಹೊಡೆಯಲು ಮುಂದಾಗಿರುವುದು ಇಲಾಖೆಯ ಉಪಟಳ ತಾಲ್ಲೂಕಿನಲ್ಲಿ ಹೆಚ್ಚಾಗಿರುವುದಕ್ಕೆ ತಾಜಾ ನಿದರ್ಶನವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ದೂರಿದರು.

ಬೇಸೂರು ಗ್ರಾಮದಲ್ಲಿ 30ಕ್ಕೂ ಹೆಚ್ಚು ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬಗಳು ಒಂದೇ ಬಡಾವಣೆಯಲ್ಲಿ ಹಲವು ವರ್ಷಗಳಿಂದ ವಾಸವಾಗಿವೆ. ಅವರೆಲ್ಲರೂ ಮಡೆನೂರು ಮತ್ತು ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣ ಸಂದರ್ಭದಲ್ಲಿ ನಿರಾಶ್ರಿತರಾಗಿರುವ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈಗ ಅರಣ್ಯ ಇಲಾಖೆಯವರು ಅವರನ್ನು ಒಕ್ಕಲೆಬ್ಬಿಸಲು ಮುಂದಾಗಿರುವುದು ಖಂಡನೀಯ ಎಂದು ಟೀಕಿಸಿದರು.

ADVERTISEMENT

ಅರಣ್ಯ ಇಲಾಖೆಗೆ ಅಗಳ ಹೊಡೆಯುವ ಸಲುವಾಗಿಯೇ ಸರ್ಕಾರದಿಂದ ದೊಡ್ಡ ಮೊತ್ತದ ಅನುದಾನ ಬಂದಿದೆ. ಈ ಕಾರಣಕ್ಕೆ ಎಲ್ಲೆಂದರಲ್ಲಿ ಅಗಳ ಹೊಡೆಯುವ ಮೂಲಕ ಹಲವು ಗ್ರಾಮಗಳಲ್ಲಿನ ರೈತರಿಗೆ ತೊಂದರೆ ಕೊಡಲು ಇಲಾಖೆ ಮುಂದಾಗಿದೆ ಎಂದು ದೂರಿದರು.

ಅರಣ್ಯ ಇಲಾಖೆ ಉಪಟಳ ತಡೆಯುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರದ ಶಾಸಕರು ತುರ್ತು ಕ್ರಮ ಕೈಗೊಳ್ಳಬೇಕು ಎಂದು  ಆಗ್ರಹಿಸಿದರು.

ಪ್ರಮುಖರಾದ ವೀರೇಶ್ ಶೆಡ್ಡಿಕೊಪ್ಪ, ಅರುಣ ಪೂಜಾರಿ, ಅಕ್ಷಯ ಪೂಜಾರಿ, ನಾಗರಾಜ್ ಮಜ್ಜಿಗೆರೆ, ಮರಿಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.