
ಸಾಗರ: ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಫೆ.3ರಿಂದ 9ದಿನಗಳ ಕಾಲ ನಡೆಯಲಿದ್ದು, ಪ್ರತಿ ದಿನವೂ ಅಪಾರ ಪ್ರಮಾಣದಲ್ಲಿ ಕಸ ಸಂಗ್ರಹವಾಗುವುದರಿಂದ ಸ್ವಚ್ಛತಾ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಲು ನಗರಸಭೆ ಆಡಳಿತ ತೀರ್ಮಾನಿಸಿದೆ ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ತಿಳಿಸಿದ್ದಾರೆ.
ಇಲ್ಲಿನ ಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ಸ್ವಚ್ಛತೆಗೆ ಕೈಗೊಂಡಿರುವ ಕ್ರಮಗಳ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ರೆ ಸಮಯದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿ ಹಾಗೂ ವಾಹನಗಳ ನೆರವು ಪಡೆಯಲಾಗುತ್ತಿದೆ ಎಂದರು.
ಪ್ರತಿ ದಿನ ಬೆಳಿಗ್ಗೆ 6 ಗಂಟೆಯೊಳಗೆ ಜಾತ್ರೆ ನಡೆಯುವ ಆವರಣದಲ್ಲಿನ ಕಸಗಳನ್ನು ವಿಲೇವಾರಿ ಮಾಡಲು ವಿಶೇಷ ತಂಡ ರಚಿಸಲಾಗಿದೆ. ರೋಗ ಹರಡದಂತೆ ತಡೆಯಲು ನಗರವ್ಯಾಪ್ತಿಯ ಚರಂಡಿಗಳಿಗೆ ಕ್ರಿಮಿನಾಶಕ ಸಿಂಪಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಜಾತ್ರೆ ವೇಳೆ ಸಾರ್ವಜನಿಕರಿಗೆ, ಮಳಿಗೆಗಳ ಮಾಲಿಕರಿಗೆ, ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು. ಈ ಉದ್ದೇಶಕ್ಕಾಗಿ 10 ಟ್ಯಾಂಕರ್ ಗಳನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಸ್ವಚ್ಛತೆ ವಿಷಯದಲ್ಲಿ ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ನಗರಸಭೆ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಮದನ್, ಕಚೇರಿ ವ್ಯವಸ್ಥಾಪಕ ಬಾಲಚಂದ್ರ, ಅಭಿಯಂತರ ವಿಠ್ಠಲ ಹೆಗಡೆ, ರಾಜ್ ಕುಮಾರ್, ಸಚಿನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.