
ಸೊರಬ: ಗುಣಮಟ್ಟದ ಶಿಕ್ಷಣದ ಜೊತೆ ಶೈ ಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಮಕ್ಕಳ ಮನೋವಿಕಾಸಕ್ಕೆ ತಕ್ಕಂತೆ ಪೂರಕವಾದ ವಾತಾವರಣ ನಿರ್ಮಾಣ ಮಾಡುವಲ್ಲಿ ಸರ್ಕಾರಿ ಶಾಲೆಗಳ ಪಾತ್ರ ಪ್ರಮುಖವಾಗಿವೆ ಎಂದು ತಾಲ್ಲೂಕು ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಚ್.ಇ. ಜ್ಞಾನೇಶ್ ಹೇಳಿದರು.
ಪಟ್ಟಣದ ರಾಜ್ ಕಲಾಕ್ಷೇತ್ರದಲ್ಲಿ ಪಿಡಬ್ಲ್ಯೂಡಿ ಕಾಲೊನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಸಮಾಜದಲ್ಲಿ ಬಡವ, ಶ್ರೀಮಂತ ಎನ್ನುವ ತಾರತಮ್ಯವಿಲ್ಲದೆ ಸಮಾನ ಶಿಕ್ಷಣ ದೊರೆತಾಗ ಮಾತ್ರ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆಯಲಿದೆ. ಉನ್ನತ ಹುದ್ದೆ ಅಲಂಕರಿಸಿದ ಹೆಚ್ಚಿನವರು ಸರ್ಕಾರಿ ಶಾಲೆಯಲ್ಲಿಯೇ ಓದಿದವರಾಗಿದ್ದಾರೆ. ಮಕ್ಕಳಿಗೆ ಶಿಕ್ಷೆ ನೀಡಿ ವಿದ್ಯೆ ಕಲಿಸುವ ಕಾಲ ಮುಗಿದು ಹೋಗಿದೆ. ಶಿಕ್ಷಕರು ಮಕ್ಕಳ ಮನಸ್ಸನ್ನು ಅರಿತು ಪ್ರೀತಿಯಿಂದ ಮಾತನಾಡಿಸಿ ಶಿಕ್ಷಣ ನೀಡಬೇಕಾಗಿದೆ. ಶಿಕ್ಷಕರನ್ನು ಸರ್ಕಾರ ಹೆಚ್ಚಾಗಿ ಅನ್ಯ ಕಾರ್ಯಗಳಿಗೆ ಬಳಕೆ ಮಾಡಿಕೊಂಡಾಗ ಮಕ್ಕಳಿಗೆ ಪರಿಪೂರ್ಣವಾಗಿ ಶಿಕ್ಷಣ ನೀಡುವುದು ಕಷ್ಟಕರ. ಬದಲಾದ ಶೈಕ್ಷಣಿಕ ವ್ಯವಸ್ಥೆಗೆ ಹೊಂದಿಕೊಳ್ಳುವುದು ಅನಿವಾರ್ಯವಾಗಿದ್ದು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಮತ್ತು ಶಿಕ್ಷಕರ ಸಹಬಾಗಿತ್ವ ಬಹು ಮುಖ್ಯವಾಗಿದೆ’ ಎಂದರು.
ಉಪನ್ಯಾಸಕ ಉಮೇಶ್ ಭದ್ರಾಪುರ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ಸಿಆರ್ಪಿ ಸುಧಾ, ಶಾಲೆಯ ಮುಖ್ಯಶಿಕ್ಷಕ ಮಧು, ಆಶ್ರಯ ಸಮಿತಿ ಅಧ್ಯಕ್ಷ ಪ್ರಶಾಂತ್ ಮೇಸ್ತ್ರಿ, ಪುರಸಭೆ ಮಾಜಿ ಸದಸ್ಯ ನಟರಾಜ್, ನಿವೃತ್ತ ಶಿಕ್ಷಕ ಪ್ರಕಾಶ್ ಕಾಸರ್ ಸೇರಿದಂತೆ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.