ಸಾಗರ: ನಗರವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳನ್ನು ಸೀಲ್ಡೌನ್ ಮಾಡಲಾಗಿದ್ದು, ತಾಲ್ಲೂಕು ಆಡಳಿತ ಅಂತಹ ಪ್ರದೇಶದ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಒತ್ತಾಯಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸೀಲ್ಡೌನ್ ಆಗಿರುವ ಪ್ರದೇಶದ ದಿನನಿತ್ಯದ ಬೇಡಿಕೆಗಳನ್ನು ಪೂರೈಸುವಲ್ಲಿ ತಾಲ್ಲೂಕು ಆಡಳಿತ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಮನೆಯೊಳಗೆ ಸ್ವಯಂ ನಿರ್ಬಂಧದಲ್ಲಿರುವ ಜನರ ಬೇಕು ಬೇಡಗಳನ್ನು ಸರಿಯಾದ ರೀತಿಯಲ್ಲಿ ಗಮನಿಸಿ ಅದಕ್ಕೆ ಸ್ಪಂದಿಸುವ ಜವಾಬ್ದಾರಿ ತಾಲ್ಲೂಕು ಆಡಳಿತದ್ದಾಗಿದೆ’ ಎಂದರು.
ಕೆಲವು ಸೀಲ್ಡೌನ್ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲಾಗದೆ ತೊಂದರೆಯಾಗುತ್ತಿದೆ ಎಂದು ಅಲ್ಲಿನ ನಿವಾಸಿಗಳು ದೂರುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಈ ಬಗ್ಗೆ ತುರ್ತು ಗಮನ ನೀಡಬೇಕು ಎಂದು ಹೇಳಿದರು.
ಸಾಗರ ನಗರಕ್ಕೆ ಶರಾವತಿ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಘಟಕದಲ್ಲಿ ಪದೇ ಪದೇ ತಾಂತ್ರಿಕ ತೊಂದರೆ ಉಂಟಾಗುತ್ತಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಜನರಿಗೆ ಸಮರ್ಪಕವಾಗಿ ನೀರು ಪೂರೈಸಲು ಆಡಳಿತ ಒತ್ತು ನೀಡಬೇಕು ಎಂದು ತಿಳಿಸಿದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್, ಜಿಲ್ಲಾ ಕಾರ್ಯದರ್ಶಿ ತಶ್ರೀಫ್ ಇಬ್ರಾಹಿಂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.