ಸಾಗರ: ತಾಲ್ಲೂಕಿನ ಆವಿನಹಳ್ಳಿ ಹೋಬಳಿಯ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಶರಾವತಿ ನದಿಯ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸಲಾಗುವುದು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.
ತಾಲ್ಲೂಕಿನ ಆವಿನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ₹ 1.70 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಬೂದುಬಣ್ಣದ ನೀರು ನಿರ್ವಹಣಾ ಯೋಜನೆಯನ್ನು ಜಾರಿಗೆ ತಂದಿದ್ದು, ಆವಿನಹಳ್ಳಿ ಪಂಚಾಯಿತಿ ಸೇರಿ ತಾಲ್ಲೂಕಿನ 13 ಪಂಚಾಯಿತಿಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ. ಯೋಜನೆಯ ಸಾಧಕ–ಬಾಧಕಗಳ ಕುರಿತು ಶೀಘ್ರದಲ್ಲಿಯೇ ಪ್ರಮುಖರ ಸಭೆಯನ್ನು ಕರೆಯಲಾಗುವುದು ಎಂದು ಅವರು ತಿಳಿಸಿದರು.
ತಾಲ್ಲೂಕಿನಲ್ಲಿ ಸಾವಿರಕ್ಕೂ ಅಧಿಕ ಕಾಮಗಾರಿಗಳು ನಡೆಯುತ್ತಿವೆ. ಆವಿನಹಳ್ಳಿ ಹೋಬಳಿಗೆ ₹ 44 ಕೋಟಿ ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ. ಕಾಮಗಾರಿಗಳ ಗುಣಮಟ್ಟ ಕಾಯಲು ಆದ್ಯತೆ ನೀಡಲಾಗಿದೆ ಎಂದರು.
ಆವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜ್ ಜಿ.ಬಿ., ಉಪಾಧ್ಯಕ್ಷೆ ಸಫಿಯಾ ಎ.ಎಂ., ಸದಸ್ಯರಾದ ಶಶಿಕಲಾ, ಸುರೇಶ್, ರಾಜು ಪಟೇಲ್, ಸವಿತಾ ರಾಮಚಂದ್ರ, ಇಂದಿರಾ ಗಣೇಶ್, ಅಶೋಕ್, ಜಯಲಕ್ಷ್ಮಿ ಧರಣೇಂದ್ರ, ಸತೀಶ್, ಲೋಕೇಶ್, ಕುಮಾರ್, ಸುಜಾತ ಹಾಲಪ್ಪ ಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.