ADVERTISEMENT

ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಬಿಜೆಪಿ, ಕಾಂಗ್ರೆಸ್ ಮುಖಂಡರಿಗೆ ಲಾಭ: ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2025, 2:30 IST
Last Updated 27 ಸೆಪ್ಟೆಂಬರ್ 2025, 2:30 IST
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ದಾಖಲೆಗಳನ್ನು ತೀ.ನ.ಶ್ರೀನಿವಾಸ್ ಪ್ರದರ್ಶಿಸಿದರು 
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ದಾಖಲೆಗಳನ್ನು ತೀ.ನ.ಶ್ರೀನಿವಾಸ್ ಪ್ರದರ್ಶಿಸಿದರು    

ಸಾಗರ: ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ಜುಲೈ 16 ರಂದೇ ಅನುಮೋದನೆ ನೀಡಿದ್ದು ಒಂದು ತಿಂಗಳ ನಂತರ ಕಾರ್ಗಲ್ ಹಾಗೂ ಗೇರುಸೊಪ್ಪದಲ್ಲಿ ಸಾರ್ವಜನಿಕರ ಅಹವಾಲು ಸಭೆ ಕರೆಯುವ ಮೂಲಕ ಜನರ ಹಾದಿ ತಪ್ಪಿಸಲಾಗುತ್ತಿದೆ’ ಎಂದು ಮಲೆನಾಡು ರೈತ ಸಂಘದ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಆರೋಪಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಇಲಾಖೆ ಅನುಮತಿ ನೀಡಿರುವ ದಾಖಲೆಗಳನ್ನು ಪ್ರದರ್ಶಿಸಿದರು. ‘ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿರುವ ವಿಷಯ ಸಂಸದರಾದ ಬಿ.ವೈ.ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಗಮನಕ್ಕೆ ಬಂದಿಲ್ಲವೇ’ ಎಂದು ಪ್ರಶ್ನಿಸಿದರು.

‘ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ವೃಕ್ಷಲಕ್ಷ ಆಂದೋಲನದ ಅನಂತ ಹೆಗಡೆ ಅಶೀಸರ ಮತ್ತಿತರರು ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಕೇಂದ್ರ ಸರ್ಕಾರ ಯೋಜನೆಗೆ ಅನುಮತಿ ನೀಡಿರುವ ವಿಷಯವನ್ನು ಅವರೇಕೆ ಬಹಿರಂಗ ಪಡಿಸುತ್ತಿಲ್ಲ’ ಎಂದು ಕೇಳಿದರು.

ADVERTISEMENT

‘ಯೋಜನೆಗಾಗಿ 12 ಸಾವಿರ ಮರ ಕಡಿಯಲು, 12 ಕಿ.ಮೀ. ಸುರಂಗ ಮಾರ್ಗ ನಿರ್ಮಿಸಲು ನೀಲನಕ್ಷೆ ಸಿದ್ಧವಾಗಿದೆ. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂ ಮಂಜೂರಾತಿ ನೀಡುವ ವಿಷಯದಲ್ಲಿ ಅಡ್ಡ ಬರುವ ಅರಣ್ಯ ಕಾಯ್ದೆ ಇಂತಹ ಜನ ವಿರೋಧಿ ಯೋಜನೆ ಅನುಷ್ಠಾನಕ್ಕೆ ಅಡ್ಡಿಯಾಗುವುದಿಲ್ಲವೇ’ ಎಂದು ಪ್ರಶ್ನಿಸಿದರು.

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಬಿಜೆಪಿ, ಕಾಂಗ್ರೆಸ್ ಮುಖಂಡರಿಗೆ ಲಾಭವಿದೆ. ಹೀಗಾಗಿ ಈ ಎರಡೂ ಪಕ್ಷಗಳಿಗೆ ಸೇರಿರುವ ಜನಪ್ರತಿನಿಧಿಗಳು ಯೋಜನೆಯ ಪರ ನಿಂತಿದ್ದಾರೆ. ನಿಜಕ್ಕೂ ಅವರಿಗೆ ಮಲೆನಾಡಿನ ಪರಿಸರ, ರೈತರ ಬಗ್ಗೆ ಕಿಂಚಿತ್ತಾದರೂ ಕಾಳಜಿಯಿದ್ದರೆ ಯೋಜನೆ ಅನುಷ್ಠಾನವನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

ಪ್ರಮುಖರಾದ ಮಂಜುನಾಥ್, ಮಂಜಪ್ಪ, ಅಶೋಕ್ ಬಿ.ಆರ್., ವೀರೇಂದ್ರ, ಕೃಷ್ಣಪ್ಪ, ರವಿಚಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.